ಬೆಂಗಳೂರು: ಗೌರಿಬಿದನೂರಿನ 200 ಎಕರೆ ಪ್ರದೇಶದಲ್ಲಿ ಅಂತರರಾಷ್ಟ್ರೀಯ ವಿಜ್ಞಾನ ಕೇಂದ್ರವನ್ನು ಸ್ಥಾಪಿಸುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ವಿಧಾನಸೌಧದಲ್ಲಿ ಬುಧವಾರ ವಿಜ್ಞಾನ ಕೇಂದ್ರದ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.
ವಿಜ್ಞಾನ ಪ್ರಚಾರಕ್ಕೆ ತಮ್ಮ ಜೀವನ ಮುಡಿಪಾಗಿಟ್ಟ ಎಚ್.ನರಸಿಂಹಯ್ಯ ನೆನಪಿನಲ್ಲಿ ವಿಜ್ಞಾನ ಕೇಂದ್ರ ಸ್ಥಾಪಿಸಲಾಗುವುದು. ಇದಕ್ಕಾಗಿ ಡಿಆರ್ಡಿಒ, ಅಂತರರಾಷ್ಟ್ರೀಯ ವಿಜ್ಞಾನಿಗಳು ಮತ್ತು ರೈತರ ಸಹಯೋಗ ಪಡೆಯಲಾಗುವುದು.ಇದಕ್ಕೆ ಅಗತ್ಯವಿರುವ ಜಾಗ ಒದಗಿಸುವುದಾಗಿ ಅವರು ಭರವಸೆ ನೀಡಿದರು.
ವಿಜ್ಞಾನ ಕೇಂದ್ರದ ರೂಪುರೇಷೆ ಕುರಿತು ವಿಸ್ತಾರವಾದ ವರದಿ ನೀಡಲು ಭಾರತೀಯ ವಿಜ್ಞಾನ ಸಂಸ್ಥೆಯ ಕೆ.ಪಿ.ಜೆ. ರೆಡ್ಡಿ ಅವರಿಗೆ ಸಭೆಯಲ್ಲಿ ಕೋರಲಾಯಿತು.
ಮುಖ್ಯಮಂತ್ರಿಯವರನ್ನು ಭೇಟಿಯಾದ ನಿಯೋಗದಲ್ಲಿ ಕೃಷಿ ಸಚಿವ ಶಿವಶಂಕರ ರೆಡ್ಡಿ, ಲೋಕೋಪಯೋಗಿ ಸಚಿವರಾದ ಎಚ್.ಡಿ.ರೇವಣ್ಣ, ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಕೆ.ಎಸ್. ರಂಗಪ್ಪ ಇದ್ದರು.