ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದ ‘ಶಕ್ತಿ ಯೋಜನೆ‘ ಆರು ತಿಂಗಳಷ್ಟೇ ಪೂರೈಸಿದ್ದರೂ, ಈ ಯೋಜನೆಯ ಸಾಧನೆ ಬೆಟ್ಟದಷ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
‘ಶಕ್ತಿ ಯೋಜನೆ‘ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಶಿಕ್ಷಣ, ಉದ್ಯೋಗ, ದೇವರ ದರ್ಶನ ಮುಂತಾದ ಕಾರಣಗಳಿಗಾಗಿ ನಾಡಿನ ಹೆಣ್ಣು ಮಕ್ಕಳು 126 ಕೋಟಿಗೂ ಅಧಿಕ ಉಚಿತ ಟಿಕೆಟ್ ಪಡೆದು ಪ್ರಯಾಣಿಸಿದ್ದಾರೆ. ಈವರೆಗಿನ ಒಟ್ಟು ಟಿಕೆಟ್ ಮೌಲ್ಯ ₹ 3,000 ಕೋಟಿ ದಾಟಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
‘ಮಹಿಳಾ ಸಬಲೀಕರಣದ ಭಾಗವಾಗಿ ಜಾರಿಗೆ ತಂದ ‘ಶಕ್ತಿ ಯೋಜನೆ’ ಗೆ ಹೆಣ್ಣು ಮಕ್ಕಳಿಂದ ವ್ಯಕ್ತವಾಗುತ್ತಿರುವ ಅಭೂತಪೂರ್ವ ಸ್ಪಂದನೆ ಕಂಡು ಖುಷಿಯಾಗುತ್ತಿದೆ. ಯೋಜನೆಯಿಂದ ಲಾಭ ಪಡೆದು ಮತ್ತಷ್ಟು ಮಹಿಳೆಯರು ಹಾಗೂ ಹೆಣ್ಣು ಮಕ್ಕಳು ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳುವಂತಾಗಲಿ’ ಎಂದಿದ್ದಾರೆ