ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಸ್ತೆಯಲ್ಲಿ ನಮಾಜ್‌: ಪಂಪ್‌ವೆಲ್‌ ವಿರುದ್ಧದ ತನಿಖೆಗೆ ತಡೆ

Published 7 ಜೂನ್ 2024, 16:28 IST
Last Updated 7 ಜೂನ್ 2024, 16:28 IST
ಅಕ್ಷರ ಗಾತ್ರ

ಬೆಂಗಳೂರು: ಮಂಗಳೂರಿನ ಕಂಕನಾಡಿ ಸಮೀಪದ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲಿ ಮುಸ್ಲಿಮರು ನಮಾಜ್ ಮಾಡಿದ ಬಳಿಕ ಕೋಮು ದ್ವೇಷ ಕೆರಳಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

‘ನನ್ನ ವಿರುದ್ಧ ಮಂಗಳೂರು ನಗರದ ಸಿಇಎನ್‌ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಶರಣ್ ಪಂಪ್‌ವೆಲ್ ಸಲ್ಲಿಸಿದ್ದ ಅರ್ಜಿ  ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. ಪ್ರಾಸಿಕ್ಯೂಷನ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ 27ಕ್ಕೆ ಮುಂದೂಡಿದೆ. ಅರ್ಜಿದಾರರ ಪರ ಹೈಕೋರ್ಟ್‌ನ ಹಿರಿಯ ಎಂ.ವಕೀಲ ಅರುಣ್‌ ಶ್ಯಾಮ್‌ ವಾದ ಮಂಡಿಸಿದರು.

ಪ್ರಕರಣವೇನು?: ‘ಕಂಕನಾಡಿ ಸಮೀಪದ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಕ್ಕೆ ಕದ್ರಿ ಠಾಣಾ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿದ್ದ ಅಧಿಕಾರಿಯನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು. ನಂತರದ ಕೆಲವೇ ಗಂಟೆಗಳಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿ, ನಮಾಜ್ ಮಾಡುವವರಿಗೆ ರಸ್ತೆ ಸಂಚಾರಕ್ಕೆ ತಡೆ ಉಂಟುಮಾಡುವ ಯಾವುದೇ ಉದ್ದೇಶ ಇರಲಿಲ್ಲ’ ಎಂದು ಪೊಲೀಸರು ಉಲ್ಲೇಖಿಸಿದ್ದರು.

ಇದನ್ನು ಆಕ್ಷೇಪಿಸಿದ್ದ ಶರಣ್ ಪಂಪವೆಲ್‌, ‘ಕಂಕನಾಡಿ ಬಳಿ ಸಾರ್ವಜನಿಕರಿಗೆ ಉದ್ದೇಶಪೂರ್ವಕವಾಗಿ ತೊಂದರೆ ನೀಡಲು ನಡೆಸಲಾಗಿರುವ ನಮಾಜ್ ಬಗ್ಗೆ ಸಂಬಂಧಪಟ್ಟವರಿಗೆ ಈಗಾಗಲೇ ತಿಳಿಸಲಾಗಿದೆ. ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಜ್ ನಡೆದರೆ, ಅದನ್ನು ಬಜರಂಗದಳ ನಿಲ್ಲಿಸುತ್ತದೆ’ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದರು. ‘ಇದು ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುವ ಮತ್ತು ಕೋಮುದ್ವೇಷ ಸೃಷ್ಟಿಸುವ ಪ್ರಯತ್ನ’ ಎಂಬ ಆರೋಪದಡಿ ಮಂಗಳೂರು ನಗರ ಸಿಇಎನ್‌ ಠಾಣಾ ಪೊಲೀಸರು ಶರಣ್‌ ಪಂಪ್‌ವೆಲ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT