ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಇಲ್ಲಿನ ಶಿವಪ್ಪ ನಾಯಕ ವೃತ್ತದಲ್ಲಿ ಸೋಮವಾರ ಬಿಜೆಪಿ ಜಿಲ್ಲಾ ಘಟಕದಿಂದ ಸಾರ್ವಜನಿಕರಿಗೆ ಸಿಹಿ ಹಂಚಿಕೆ, ಸಂಭ್ರಮಾಚರಣೆ ನಡೆಯಿತು. ಈ ವೇಳೆ ಬಿಜೆಪಿ ಕಾರ್ಯಕರ್ತರ 'ಜೈ ಶ್ರೀರಾಮ್' ಘೋಷಣೆಗೆ ಪ್ರತಿಯಾಗಿ ಅಲ್ಲಿದ್ದ ಮುಸ್ಲಿಂ ಮಹಿಳೆಯೊಬ್ಬರು 'ಅಲ್ಲಾಹು ಅಕ್ಬರ್' ಎಂದು ಘೋಷಣೆ ಕೂಗಿದರು. ಇದು ಕೆಲಕಾಲ ಸ್ಥಳದಲ್ಲಿ ಗೊಂದಲ ಸೃಷ್ಟಿಸಿತು.
ಘೋಷಣೆ ಕೂಗಿದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು ಕೋಟೆ ಪೊಲೀಸ್ ಠಾಣೆಗೆ ಕರೆದೊಯ್ದರು.
ಬಿಜೆಪಿ ಸಂಭ್ರಮಾಚರಣೆ ವೇಳೆ ಶಿವಪ್ಪ ನಾಯಕ ವೃತ್ತದ ಮೂಲಕ ಸ್ಕೂಟರ್ ನಲ್ಲಿ ಮಗುವಿನೊಂದಿಗೆ ಹೊರಟಿದ್ದ ಮಹಿಳೆ ಸಂಭ್ರಮಾಚರಣೆ ಕಾರ್ಯಕ್ರಮ ನೋಡುತ್ತಾ ನಿಂತಿದ್ದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಸಂಚಾರ ದಟ್ಟಣೆ ತಪ್ಪಿಸಲು ಅವರನ್ನು ಅಲ್ಲಿಂದ ಕಳಿಸಲು ಮುಂದಾದರು. ಆಗ ಮಹಿಳೆ ಪ್ರತಿಭಟಿಸಿದರು.
ಇದೇ ವೇಳೆ ಸಂಭ್ರಮಾಚರಣೆಯಲ್ಲಿ ನಿರತರಾಗಿದ್ದವರು 'ಜೈ ಶ್ರೀರಾಮ್' ಎಂದು ಘೋಷಣೆ ಕೂಗುತ್ತಿದ್ದರು. ಆಗ ಮಹಿಳೆಯೂ 'ಅಲ್ಲಾಹು ಅಕ್ಬರ್' ಎಂದು ಘೋಷಣೆ ಕೂಗಿದರು. ಇದರಿಂದ ಪೊಲೀಸರು ತಬ್ಬಿಬ್ಬಾದರು.
ಪೊಲೀಸರು ಅಲ್ಲಿಂದ ಕಳುಹಿಸಲು ಮುಂದಾದರೂ ಮಹಿಳೆ ಘೋಷಣೆ ಕೂಗುವುದು ಮುಂದುವರೆಸಿದರು. ಅದಕ್ಕೆ ಪ್ರತಿಯಾಗಿ ಗುಂಪು ಕೂಡ 'ಜೈಶ್ರೀರಾಮ್' ಘೋಷಣೆ ಕೂಗತೊಡಗಿ ಆಕೆಯ ಹಿಂದೆ ತೆರಳಿತು. ಇದರಿಂದ ಕೆಲಕಾಲ ಶಿವಪ್ಪ ನಾಯಕ ವೃತ್ತದಲ್ಲಿ ಗೊಂದಲವೇರ್ಪಟ್ಟಿತು. ಮಹಿಳೆಯನ್ನು ವಶಕ್ಕೆ ಪಡೆದ ಪೊಲೀಸರು ವಾಹನದಲ್ಲಿ ಠಾಣೆಗೆ ಕರೆದೊಯ್ದರು.