ಬೆಂಗಳೂರು: ‘ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ನಿಯಮಿತ (ರೆಗ್ಯುಲರ್) ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ
ರೋಸ್ಟರ್ ಪ್ರಕ್ರಿಯೆಗಳಿಗೆ ಅನುಗುಣವಾಗಿ ವಿಚಾರಣೆಗೆ ಒಳಪಡಲಿ’ ಎಂದು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಈ ಕುರಿತಂತೆ ಶಿವಮೂರ್ತಿ ಶರಣರು ಸಲ್ಲಿಸಿರುವ ಕ್ರಿಮಿನಲ್ ಅರ್ಜಿ (ಸಿಆರ್ಎಲ್ಪಿ 5031/2023) ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಸೋಮವಾರ ಬೆಳಗ್ಗೆ ವಿಚಾರಣೆಗೆ ನಿಗದಿಯಾಗಿತ್ತು.
ಕೋರ್ಟ್ ಹಾಲ್ ಪ್ರಕರಣಗಳ ಯಾದಿಯ ಅನುಸಾರ ಪ್ರಕರಣ ವಿಚಾರಣೆಗೆ ಬರುತ್ತಿದ್ದಂತೆ ನ್ಯಾಯಮೂರ್ತಿ ನವಾಜ್ ಅವರು, ‘ಈ ಅರ್ಜಿಯು ರೋಸ್ಟರ್ ಪ್ರಕ್ರಿಯೆಗಳಿಗೆ ಅನುಗುಣವಾಗಿ ಸೂಕ್ತವಾದ ನ್ಯಾಯಪೀಠದ ಮುಂದೆಯೇ ವಿಚಾರಣೆಗೆ ನಿಗದಿಯಾಗಬೇಕಾದ ಅಗತ್ಯವಿದೆ. ಹೀಗಾಗಿ, ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳ ಅವಗಾಹನೆಗೆ ತನ್ನಿ’ ಎಂದು ರಿಜಿಸ್ಟ್ರಿಗೆ ಸೂಚಿಸಿದರು.
ಶಿವಮೂರ್ತಿ ಶರಣರ ಪರವಾಗಿ ವಕೀಲ ಸಂದೀಪ್ ಎಸ್.ಪಾಟೀಲ ಹಾಜರಾಗಿದ್ದರು.
ಪ್ರಕರಣವೇನು?: ಪ್ರೌಢಶಾಲೆಯಲ್ಲಿ ಓದುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಶಿವಮೂರ್ತಿ ಶರಣರನ್ನು ಪೊಲೀಸರು 2022ರ ಸೆಪ್ಟೆಂಬರ್ 1ರಂದು ಬಂಧಿಸಿದ್ದು ಅಂದಿನಿಂದಲೂ ಅವರು ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ವಿರುದ್ಧ ಪೊಕ್ಸೊ, ಅತ್ಯಾಚಾರ, ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ ಗುರುತರ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ.