ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಹಾಲಿ ಸದಸ್ಯರಾಗಿರುವ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಆಯೋಗದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಪಾಲ ವಜುಭಾಯಿ ವಾಲಾ ಶನಿವಾರ ಆದೇಶ ಹೊರಡಿಸಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಹೇಮನಾಳ ಗ್ರಾಮದ ಶಿವಶಂಕರಪ್ಪ 2019ರ ಸೆಪ್ಟೆಂಬರ್ 3ರಂದು ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದರು.
ಕೃಷಿ ಎಂಜಿನಿಯರಿಂಗ್ ಪದವೀಧರರಾಗಿರುವ ಇವರ ಅಧಿಕಾರದ ಅವಧಿ ಇನ್ನೂ ಮೂರೂವರೆ ವರ್ಷ ಇದೆ.
ನಿವೃತ್ತ ಐಎಎಸ್ ಅಧಿಕಾರಿ ಷಡಾಕ್ಷರಿ ಸ್ವಾಮಿ ಅವರು ಕೆಪಿಎಸ್ಸಿ ಅಧ್ಯಕ್ಷರ ಹುದ್ದೆಯಿಂದ ಶನಿವಾರ ನಿವೃತ್ತರಾದರು.
ಅವರ ಸ್ಥಾನಕ್ಕೆ ಶಿವಶಂಕರಪ್ಪ ಅವರನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರ ಮಾಡಿದ್ದ ಶಿಫಾರಸು ಆಧರಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಸದಸ್ಯರೊಬ್ಬರನ್ನೇ ಅಧ್ಯಕ್ಷರಾಗಿ ನೇಮಕ ಮಾಡಿರುವುದರಿಂದಾಗಿ ಕೆಪಿಎಸ್ಸಿಯಲ್ಲಿ ಒಂದು ಸದಸ್ಯ ಸ್ಥಾನ ಖಾಲಿ ಆದಂತಾಗಿದೆ.