ಶಿವಯೋಗಮಂದಿರ (ಬಾದಾಮಿ) :‘ಇಲ್ಲಿನ ಶಿವಯೋಗಮಂದಿರದಲ್ಲಿ ಅ.26 ರಿಂದ 28 ರವರೆಗೆ ಮೂರು ದಿನಗಳ ಕಾಲ ರಾಜ್ಯ ಮಟ್ಟದ 32 ನೇ ಇತಿಹಾಸ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಡಾ. ಸಂಗನಬಸವ ಸ್ವಾಮೀಜಿ ಹೇಳಿದರು.
ಶಿವಯೋಗಮಂದಿರ ಮತ್ತು ಕರ್ನಾಟಕ ಇತಿಹಾಸ ಅಕಾಡೆಮಿ ಆಶ್ರಯದಲ್ಲಿ ಸಮ್ಮೇಳನ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇತಿಹಾಸ ಸಂಶೋಧಕ ಚಿತ್ರದುರ್ಗದ ಡಾ.ಬಿ. ರಾಜಶೇಖರಪ್ಪ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದೇ ಸಂದರ್ಭದಲ್ಲಿ ನಾಡಿನ ಮತ್ತು ಹೊರನಾಡಿನ ಇತಿಹಾಸ ಸಂಶೋಧಕರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
ಸಮ್ಮೇಳನದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 350 ಕ್ಕೂ ಅಧಿಕ ಸಂಶೋಧಕರು ಮತ್ತು ಉಪನ್ಯಾಸಕರು ಪಾಲ್ಗೊಳ್ಳಲಿದ್ದಾರೆ. ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ಆಸಕ್ತರು, ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು ಎಂದು ಹೇಳಿದರು.
ಗೋಷ್ಠಿಯಮೊದಲ ದಿನ ದಿಂಗಾಲೇಶ್ವರ ಸ್ವಾಮೀಜಿ ಮತ್ತು ಪ್ರಾಚಾರ್ಯ ಡಾ. ವಿಜಯಕುಮಾರ ಕಟಗಿಹಳ್ಳಿಮಠ ಶಿವಯೋಗಮಂದಿರ ಸಂಸ್ಥೆಯ ಕುರಿತು ಮಾತನಾಡಲಿದ್ದಾರೆ. ನಂತರ ನಡೆಯುವ ವಿವಿಧ ಗೋಷ್ಠಿಗಳಲ್ಲಿ 150ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧಗಳನ್ನು ಮಂಡಿಸಲಿದ್ದಾರೆ ಎಂದು ತಿಳಿಸಿದರು.
ಶಿವಯೋಗಮಂದಿರ ಸಂಸ್ಥೆಯಲ್ಲಿ ಈಗ ಎರಡನೇ ಬಾರಿಗೆ ಸಮ್ಮೇಳನ ಆಯೋಜಿಸಲಾಗಿದೆ ಎಂದರು.