ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟ ವಿಸ್ತರಣೆಗೆ ಸದ್ಯವೇ ಒಪ್ಪಿಗೆ; ಮಾಸಾಂತ್ಯದೊಳಗೆ ಕಸರತ್ತು ಪೂರ್ಣ

Last Updated 7 ಜನವರಿ 2021, 16:30 IST
ಅಕ್ಷರ ಗಾತ್ರ

ಬೆಂಗಳೂರು: ಈ ತಿಂಗಳ ಅಂತ್ಯದೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡಲು ಅನುವಾಗುವಂತೆ ಬಿಜೆಪಿ ವರಿಷ್ಠರು ಒಪ್ಪಿಗೆ ನೀಡುವ ಸಾಧ್ಯತೆ ಇದೆ. ಈ ಸುಳಿವು ಸಿಕ್ಕಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಸಂಪುಟ ವಿಸ್ತರಣೆಯ ತಯಾರಿ ಸಿದ್ಧತೆ ನಡೆಸಿದ್ದಾರೆ.

‘ಈ ಬಾರಿ ಸಚಿವರ ಸಂಪುಟ ವಿಸ್ತರಣೆ ಆಗುವುದು ಖಚಿತ. ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಉಸ್ತುವಾರಿ ಅರುಣ್‌ಸಿಂಗ್‌ ಅವರು ದೆಹಲಿಗೆ ಮರಳುವುದಕ್ಕೆ ಮುನ್ನ ಈ ಸಂಬಂಧ ಸೂಚನೆ ನೀಡಿದ್ದಾರೆ’ ಎಂದು ಬಿಜೆಪಿಯ ಉನ್ನತ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ಮುಖ್ಯಮಂತ್ರಿಯವರು ಈಗಾಗಲೇ ಭರವಸೆ ನೀಡಿರುವಂತೆ ಆರ್‌.ಶಂಕರ್‌, ಎಂ.ಟಿ.ಬಿ.ನಾಗರಾಜ್‌, ಮುನಿರತ್ನ ಅವರಿಗೆ ಸಚಿವ ಸ್ಥಾನ ಸಿಗುವುದು ಖಚಿತ. ಅಲ್ಲದೆ, ಉಮೇಶ ಕತ್ತಿ, ರಾಜೂಗೌಡ, ಸಿ.ಪಿ.ಯೋಗೇಶ್ವರ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಅರವಿಂದ ಲಿಂಬಾವಳಿ ಅವರ ಹೆಸರು ವರಿಷ್ಠರ ಪರಿಶೀಲನೆಯಲ್ಲಿದೆ. ವರಿಷ್ಠರು ಹಸಿರು ನಿಶಾನೆ ನೀಡಿದರೆ ಪಟ್ಟಿಯಿಂದ ಒಬ್ಬರನ್ನು ಕೈಬಿಟ್ಟು ಲಿಂಬಾವಳಿಗೆ ಅವಕಾಶ ಸಿಗಬಹುದು ಎಂದು ಮೂಲಗಳು ತಿಳಿಸಿವೆ.

ವರಿಷ್ಠರ ಸಂಪೂರ್ಣ ಒಪ್ಪಿಗೆಯ ಮೇರೆಗೆ ಸಂಪುಟ ವಿಸ್ತರಣೆ ಮಾಡಬೇಕು ಎಂಬುದು ಯಡಿಯೂರಪ್ಪ ಅವರ ಇರಾದೆ. ಹೀಗಾಗಿ ಎಷ್ಟೇ ಒತ್ತಡಗಳಿದ್ದರೂ ಒಪ್ಪಿಗೆ ಪಡೆಯದೇ ವಿಸ್ತರಣೆಗೆ ಕೈ ಹಾಕುವುದಿಲ್ಲ ಎಂಬ ನಿಲುವಿಗೆ ಬಂದಿದ್ದಾರೆ. ಸಂಭಾವ್ಯ ಸಚಿವರ ಪಟ್ಟಿಗೆ ಒಪ್ಪಿಗೆ ಪಡೆದೇ ಮುಂದುವರಿಯಲು ತೀರ್ಮಾನಿಸಿದ್ದಾರೆ.

ಒಟ್ಟು ಏಳು ಸಚಿವ ಸ್ಥಾನಗಳು ಖಾಲಿ ಇದ್ದು, ಕನಿಷ್ಠ ಆರು ಸಚಿವ ಸ್ಥಾನಗಳನ್ನು ತುಂಬಲು ತೀರ್ಮಾನಿಸಲಾಗಿದೆ. ಸರ್ಕಾರ ರಚನೆಗೆ ಕಾರಣರಾದ ಆರ್‌.ಶಂಕರ್‌, ಎಂ.ಟಿ.ಬಿ.ನಾಗರಾಜ್‌, ಮುನಿರತ್ನ ಅವರಿಗೆ ಸಚಿವ ಸ್ಥಾನ ಸಿಗುವುದು ಖಚಿತವಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಒತ್ತು ನೀಡುವ ಉದ್ದೇಶದಿಂದ ರಾಜೂಗೌಡ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT