ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಸಂಜೆಯೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
‘ಕೆಲವು ವರ್ಷಗಳ ಹಿಂದೆ ಮೂಲವ್ಯಾಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಅದೇ ಜಾಗದಲ್ಲಿ ಪುನಃ ಸಣ್ಣ ಗುಳ್ಳೆಯೊಂದು ಉಂಟಾಗಿತ್ತು. ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆ ಮೂಲಕ ಅದನ್ನು ತೆಗೆದುಹಾಕಲಾಗಿದೆ’ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಶುಕ್ರವಾರ ಬೆಳಿಗ್ಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಸಂಜೆ ಆಸ್ಪತ್ರೆಯಿಂದ ಮನೆಗೆ ವಾಪಸಾಗಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ.