ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಹಳ್ಳಿಗಳಿಗೆ ಮಹಾರಾಷ್ಟ್ರ ವಿಮೆ: ಪರಿಣಾಮ ನೆಟ್ಟಗಿರದು ಎಂದ ಸಿದ್ದರಾಮಯ್ಯ

Last Updated 5 ಏಪ್ರಿಲ್ 2023, 9:20 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ 865 ಹಳ್ಳಿಗಳಿಗೆ ಆರೋಗ್ಯ ವಿಮೆ ಜಾರಿ ಮಾಡಿರುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರದ ಈ ಉದ್ಧಟತನವನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರಜಾವಾಣಿ ವರದಿ ಉಲ್ಲೇಖಿಸಿ ಸರಣಿ ಟ್ವೀಟ್‌ ಮಾಡಿರುವ ಅವರು, ರಾಜ್ಯದ ಮುಖ್ಯಮಂತ್ರಿ ಬದ್ಧತೆ ತೋರಿಸಬೇಕಾದ ಕಾಲ ಬಂದಿದೆ ಎಂದು ಹೇಳಿದ್ದಾರೆ.

‘ಕನ್ನಡಿಗರ ತೀವ್ರ ವಿರೋಧದ ಹೊರತಾಗಿಯೂ ರಾಜ್ಯದ ಗಡಿಯೊಳಗಿರುವ 865 ಹಳ್ಳಿಗಳಿಗೆ ಆರೋಗ್ಯ ವಿಮೆ ಜಾರಿ ಮಾಡಿರುವ ಮಹಾರಾಷ್ಟ್ರ ಸರ್ಕಾರದ ಕ್ರಮ ಉದ್ಧಟತನದ್ದು. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಆದೇಶವನ್ನು ತಕ್ಷಣ ವಾಪಸ್ ಪಡೆಯದೆ ಇದ್ದರೆ ಪರಿಣಾಮ ನೆಟ್ಟಗಾಗದು‘ ಎಂದು ಎಚ್ಚರಿಕೆ ನೀಡಿದ್ದಾರೆ.

‘ರಾಜ್ಯದಲ್ಲಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಭರವಸೆ ನೀಡಿದ್ದರು. ಇವರಿಬ್ಬರ ಮಾತಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಕವಡೆ ಕಾಸಿನ ಕಿಮ್ಮತ್ತು ಕೊಟ್ಟಿಲ್ಲ. ರಾಜ್ಯದ ಗಡಿಯೊಳಗೆ ಆರೋಗ್ಯ ವಿಮೆ ಜಾರಿಗೆ ಮಹಾರಾಷ್ಟ್ರ ಸರ್ಕಾರ ಯತ್ನಿಸಿದಾಗಲೇ ನಾವು ವಿರೋಧಿಸಿದ್ದೆವು. ಅಲ್ಲಿಯ ವರೆಗೆ ತೆಪ್ಪಗಿದ್ದ ರಾಜ್ಯದ ಮುಖ್ಯಮಂತ್ರಿಗಳು ನಮ್ಮ ಒತ್ತಡಕ್ಕೆ ಮಣಿದು ವೀರಾವೇಶದ ಮಾತುಗಳನ್ನಾಡಿದ್ದರು. ಆ ಆವೇಶ, ಬದ್ಧತೆಯನ್ನು ತೋರಿಸಬೇಕಾದ ಕಾಲ ಈಗ ಬಂದಿದೆ.‌‘ ಎಂದು ಹೇಳಿದ್ದಾರೆ.

‘ಗಡಿ ವಿವಾದ ಇತ್ಯರ್ಥಗೊಳ್ಳುವವರೆಗೆ ಎರಡೂ ರಾಜ್ಯಗಳು ವಿವಾದವನ್ನು ಕೆದಕಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಾಕೀತು ಮಾಡಿ ಎರಡೂ ರಾಜ್ಯಗಳ ಸದಸ್ಯರನ್ನೊಳಗೊಂಡ ಸಲಹಾ ಸಮಿತಿ ರಚಿಸಿದ್ದರು. ಆ ಸೂಚನೆಯನ್ನೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಧಿಕ್ಕರಿಸಿದ್ದಾರೆ. ಬೆಳಗಾವಿ ಗಡಿವಿವಾದ ನ್ಯಾಯಾಲಯದ ಕಟಕಟೆಯಲ್ಲಿದೆ. ಕನ್ನಡಿಗರಿಗೆ ನ್ಯಾಯ ಸಿಗುತ್ತದೆ ಎನ್ನುವ ಭರವಸೆ ನಮಗೆ ಇದೆ. ಈ ನಡುವೆ ರಾಜಕೀಯ ಲಾಭದ ದುರುದ್ದೇಶದಿಂದ ಮಹಾರಾಷ್ಟ್ರ ಆಗಾಗ ಗಡಿತಂಟೆಯನ್ನು ಕೆದಕುವ ಕಿಡಿಗೇಡಿತನ ಮಾಡುವುದು ಖಂಡನೀಯ. ಕನ್ನಡಿಗರು ಇದನ್ನು ಸಹಿಸುವುದಿಲ್ಲ‘ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT