ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಹಾಗೂ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರಗಳ ಬಗ್ಗೆ ತನಿಖೆಗೆ ಐಪಿಎಸ್ ಅಧಿಕಾರಿ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಿದೆ.
ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್ ಪಿ. (52) ಅವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ ಬಳಿಯಿರುವ ತಮ್ಮ ನಿವಾಸದಲ್ಲಿ ಮೇ 26ರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದರು.
ತಮ್ಮ ಸಾವಿಗೆ ಕಾರಣರಾಗಿದ್ದಾರೆ ಎನ್ನಲಾದವರ ಹೆಸರು ಮತ್ತು ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ಡೆತ್ನೋಟ್ನಲ್ಲಿ ಚಂದ್ರಶೇಖರ್ ಅವರು ವಿವರವಾಗಿ ಉಲ್ಲೇಖಿಸಿದ್ದರು.
ಶಿವಮೊಗ್ಗ ಜಿಲ್ಲೆಯವರಾದ ಇವರು, ಬೆಂಗಳೂರಿನಿಂದ ಮೇ 25ರಂದು ನಗರಕ್ಕೆ ಬಂದಿದ್ದರು. 26ರಂದು ಪತ್ನಿ ಕವಿತಾ ಮತ್ತಿತರರು ಮೃತರೊಬ್ಬರ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಮಾಚೇನಹಳ್ಳಿಗೆ ತೆರಳಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಈ ಸಮಯದಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮರಣ ಪತ್ರ ಪತ್ತೆ: ‘ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ ದುರುಗಣ್ಣವರ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಶುಚಿಸ್ಮತಾ ರವುಲ್ ನನ್ನ ಸಾವಿಗೆ ಕಾರಣ. ಮಾನ್ಯ ಸಚಿವರು ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಹಣ ವರ್ಗಾಯಿಸಲು ಲೆಕ್ಕಾಧಿಕಾರಿ ಹೇಳಿದ ಹಿನ್ನೆಲೆಯಲ್ಲಿ ನಿಗಮದ ₹187.33 ಕೋಟಿ ಅನುದಾನವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಲಾಗಿದೆ. ವ್ಯವಸ್ಥಾಪಕ ನಿರ್ದೇಶಕರು ಒತ್ತಾಯಪೂರ್ವಕ ಅನುದಾನ ವರ್ಗಾಯಿಸುತ್ತಿದ್ದರು. ನಮಗೆ ಅವರ ಒಳಸಂಚು ಅರ್ಥವೇ ಆಗಿಲ್ಲ. ಬ್ಯಾಂಕ್ನವರು ಚೆಕ್ ಬುಕ್ ಮತ್ತು ಪಾಸ್ ಬುಕ್ ಅನ್ನು ಈವರೆಗೂ ನೀಡಿಲ್ಲ. ಇದಲ್ಲದೇ ನಿಗಮದಲ್ಲಿ ಅಂದಾಜು ₹80 ಕೋಟಿಯಿಂದ
₹85 ಕೋಟಿ ಅವ್ಯವಹಾರ ಆಗಿದೆ. ಅಧಿಕಾರಿಗಳು ಅಕ್ರಮವಾಗಿ ಹಣ ವರ್ಗಾವಣೆ ಮಾಡಿಸಿದ್ದಾರೆ’ ಎಂದು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದರು.
‘ನಾನು ನಿಗಮಕ್ಕೆ ಮೋಸ ಮಾಡಿಲ್ಲ. ಅವ್ಯವಹಾರದಲ್ಲಿ ಭಾಗಿ ಆಗಿಲ್ಲ.
ವಂಚನೆಯನ್ನೂ ಮಾಡಿಲ್ಲ. ಬೇರೆಯವರು ನಿಯಮಬಾಹಿರವಾಗಿ ಹಣ ಲೂಟಿ ಮಾಡಿರುವುದು ಕಂಡುಬರುತ್ತಿದೆ. ಇದರಲ್ಲಿ ನನ್ನ ಪಾತ್ರವಿಲ್ಲ. ಕೆಲಸದ ಒತ್ತಡದಲ್ಲಿ ನಾನು ಮಾಡಿರುವ ತಪ್ಪು ಏನೆಂದರೆ, ಖಾತೆಯ ಚೆಕ್ ಬುಕ್ ಮತ್ತು ಕ್ಯಾಶ್ ಪುಸ್ತಕ ಮುಕ್ತಾಯಗೊಳಿಸದಿರುವುದು’ ಎಂದು ಬರೆದಿದ್ದಾರೆ.
‘ನಾನು ಹೇಡಿಯಲ್ಲ. ಅಲ್ಲದೇ, ಅವಮಾನವನ್ನು ಸಹಿಸಲಾರೆ. ನನಗೆ ಬೇರೆ ದಾರಿ ತೋಚಲಿಲ್ಲ. ಎಲ್ಲರೂ ಕ್ಷಮಿಸಿ’ ಎಂದು ಚಂದ್ರಶೇಖರ್ ಬರೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.