ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗದ ಎಸ್‌ಜೆಎಂ ವಿದ್ಯಾಪೀಠಕ್ಕೆ ಸಮರ್ಥ ಅಧ್ಯಕ್ಷ ನೇಮಕವಾಗಲಿ: ಹೈಕೋರ್ಟ್‌

Published 28 ಸೆಪ್ಟೆಂಬರ್ 2023, 14:21 IST
Last Updated 28 ಸೆಪ್ಟೆಂಬರ್ 2023, 14:21 IST
ಅಕ್ಷರ ಗಾತ್ರ

ಬೆಂಗಳೂರು: ಚಿತ್ರದುರ್ಗದ ‘ಶ್ರೀ ಮುರುಘರಾಜೇಂದ್ರ ಬೃಹನ್ಮಠ‘ಕ್ಕೆ ಸೇರಿದ, ‘ಶ್ರೀ ಜಗದ್ಗುರು ಮುರುಘರಾಜೇಂದ್ರ‘ (ಎಸ್‌ಜೆಎಂ) ವಿದ್ಯಾಪೀಠಕ್ಕೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವತನಕ, ಸದ್ಯ ಮೇಲುಸ್ತುವಾರಿ ಸಮಿತಿಯ ಜವಾಬ್ದಾರಿ ಹೊತ್ತಿರುವ ಬಸವಪ್ರಭು ಸ್ವಾಮೀಜಿಯ ಆಡಳಿತ ಮತ್ತು ನಿರ್ವಹಣೆಯೇ ಮುಂದುವರಿಯಲಿದ್ದು, ಇದು ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರ (ಪಿಡಿಜೆ) ನಿಗಾದಲ್ಲೇ ಇರಬೇಕು‘ ಎಂದು ಹೈಕೋರ್ಟ್‌ ತೀರ್ಪು ನೀಡಿದೆ.

ಈ ಸಂಬಂಧ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಏಳು ಮೇಲ್ಮನವಿಗಳ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಾಲ್‌ ಅವರಿದ್ದ ವಿಭಾಗೀಯ ನ್ಯಾಯಪೀಠವು ಕಾಯ್ದಿರಿಸಿದ್ದ ತನ್ನ ತೀರ್ಪನ್ನು ಬುಧವಾರ (ಸೆ.27) ಪ್ರಕಟಿಸಿದ್ದು, ‘ವಿದ್ಯಾಪೀಠದ ಆಡಳಿತದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವಂತಹ ಹೊಸ ಅಧ್ಯಕ್ಷರನ್ನು ನೇಮಕ ಮಾಡಬೇಕು. ಹೊಸ ಅಧ್ಯಕ್ಷರನ್ನು ನೇಮಕ ಮಾಡಿದ ಕ್ಷಣದಿಂದಲೇ ಪಿಡಿಜೆ ಪಾತ್ರ ಕೊನೆಗೊಳ್ಳುತ್ತದೆ‘ ಎಂದು ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ. 

‘ಎಸ್‌ಜೆಎಂ ವಿದ್ಯಾಪೀಠವು ನೋಂದಾಯಿತ ಸೊಸೈಟಿಯಾಗಿದ್ದು, ಇದರ ಅಧ್ಯಕ್ಷರು ಮಾತ್ರವೇ ನಿರ್ಧಾರಗಳನ್ನು ತೆಗೆದುಕೊಳ್ಳಬಹುದಾಗಿದೆ. ಆದರೆ, ಈ ವಿದ್ಯಾಪೀಠದ ಅಧ್ಯಕ್ಷ ಎನಿಸಿರುವ ಮಠಾಧಿಪತಿ ಶಿವಮೂರ್ತಿ ಶರಣರು ಸದ್ಯ ಜೈಲಿನಲ್ಲಿರುವ ಕಾರಣ ನೂತನ ಅಧ್ಯಕ್ಷರ ನೇಮಕವಾಗಬೇಕಿದೆ. ಈ ನೇಮಕಾತಿ ಆಗುವ ತನಕ, ಹಂಗಾಮಿ ಆಡಳಿತಾಧಿಕಾರಿಯಾಗಿ ಜಿಲ್ಲಾ ನ್ಯಾಯಾಧೀಶರು ವಿದ್ಯಾಪೀಠದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಾರೆ‘ ಎಂದು ನಿರ್ದೇಶಿಸುವ ಮೂಲಕ ಎಲ್ಲ ಮೇಲ್ಮನವಿಗಳನ್ನು ವಿಲೇವಾರಿ ಮಾಡಿದೆ.

‘ವಿದ್ಯಾಪೀಠದ ನಿಯಮ ಮತ್ತು ನಿಬಂಧನೆಗಳ ಪ್ರಕಾರ, ವಿದ್ಯಾಪೀಠದ ನಿರ್ವಹಣೆ ಮತ್ತು ಅದರ ಆಡಳಿತವನ್ನು ಬೃಹನ್ಮಠದ ಜಗದ್ಗುರು ಅಧ್ಯಕ್ಷರಾಗಿರುವ ಆಡಳಿತ ಮಂಡಳಿಯಿಂದಲೇ ಕಾರ್ಯ ನಿರ್ವಹಿಸಬೇಕಾಗುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಮಠಾಧಿಪತಿ ಜೈಲಿನಲ್ಲಿರುವ ಕಾರಣ ಅವರು ಆಡಳಿತ ಮತ್ತು ನಿರ್ವಹಣೆಯನ್ನು ನಿಭಾಯಿಸಲು ಆಗದಂತಹ ವಿಚಿತ್ರ ಪರಿಸ್ಥಿತಿ ಎದುರಾಗಿದೆ. ಮಠಾಧಿಪತಿಯೇ ಸರ್ವೊಚ್ಛ ಅಧಿಕಾರಿ ಎನಿಸಿರುವುದರಿಂದ ಉಪಾಧ್ಯಕ್ಷರೂ ಕಾರ್ಯ ನಿರ್ವಹಿಸಲು ಆಗುತ್ತಿಲ್ಲ. ಹೀಗಾಗಿ, ವಿದ್ಯಾಪೀಠದ ಉಪ ಕಾನೂನು (ಬೈ–ಲಾ), ನಿಯಮಗಳು ಮತ್ತು ನಿಯಮಾವಳಿಗಳ ಪ್ರಕಾರ ಹೊಸ ಅಧ್ಯಕ್ಷರನ್ನು ನೇಮಿಸುವವರೆಗೆ, ಜಿಲ್ಲಾ ನ್ಯಾಯಾಧೀಶರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ‘ ಎಂದು ತೀರ್ಪಿನಲ್ಲಿ ವಿವರಿಸಲಾಗಿದೆ.

ಪ್ರಕರಣವೇನು?

 ‘ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಪೊಲೀಸರು 2022ರ ಸೆಪ್ಟೆಂಬರ್ 1ರಂದು ಅವರನ್ನು ಬಂಧಿಸಿದ್ದು ಅಂದಿನಿಂದಲೂ ಅವರು ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೀಗಾಗಿ, ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್.ವಸ್ತ್ರದ ಅವರನ್ನು 2022ರ ಡಿಸೆಂಬರ್ 13ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ಅವರು 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದರು.

ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ರಿಟ್‌ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಆಡಳಿತಾಧಿಕಾರಿ ನೇಮಕವನ್ನು 2023ರ ಮೇ 22ರಂದು ರದ್ದುಪಡಿಸಿತ್ತು. 

’ಸರ್ಕಾರವು ಮಠದ ವಿಷಯಗಳಲ್ಲಿ ಮಧ್ಯಪ್ರವೇಶಿಸಲು ಬರುವುದಿಲ್ಲ. ಶಾಸನಯುಕ್ತ ಅಧಿಕಾರ ಇದ್ದರೆ ಮಾತ್ರವೇ ಮಧ್ಯಪ್ರವೇಶ ಮಾಡಬಹುದು. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಕಾಯ್ದೆ–1997ಕ್ಕೆ ರಾಜ್ಯ ಸರ್ಕಾರ 2011ರಲ್ಲೇ ತಿದ್ದುಪಡಿ ತಂದಿದೆ. ಈ ತಿದ್ದುಪಡಿಯ ಅನುಸಾರ ಯಾವುದೇ ಮಠ, ಮಠಕ್ಕೆ ಹೊಂದಿಕೊಂಡ ದೇಗುಲಗಳನ್ನು ಶಾಸನದಿಂದ ಹೊರಗಿಡಲಾಗಿದೆ. ಈ ಕುರಿತ ತಿದ್ದುಪಡಿಯನ್ನು ಸುಪ್ರೀಂ ಕೋರ್ಟಿಗೂ ಸಲ್ಲಿಸಲಾಗಿದೆ‘ ಎಂದು ಹೇಳಿತ್ತು.

ಅಂತೆಯೇ, ‘ಶರಣರು ಜೈಲಿನಲ್ಲಿರುವ ಕಾರಣ, ಮಠ, ವಿದ್ಯಾಪೀಠ ಹಾಗೂ ಶೈಕ್ಷಣಿಕ ಸಂಸ್ಥೆಗಳ ಆಡಳಿತ ನಿರ್ವಹಣೆಗಾಗಿ ಮಠದ ಭಕ್ತರು, ವೀರಶೈವ, ಲಿಂಗಾಯತ ಸಮುದಾಯದ ಮುಖಂಡರು ಈ ಆದೇಶ ಹೊರಬಿದ್ದ ಆರು ವಾರಗಳ ಒಳಗಾಗಿ ಮಧ್ಯಂತರ ವ್ಯವಸ್ಥೆ ಮಾಡಿಕೊಳ್ಳಬೇಕು’ ಎಂದೂ ನಿರ್ದೇಶಿಸಿತ್ತು. ಏಕಸದಸ್ಯ ನ್ಯಾಯಪೀಠದ ಈ ಆದೇಶವನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್‌.ಏಕಾಂತಯ್ಯ, ವಿಧಾನ ಪರಿಷತ್‌ ಸದಸ್ಯ ಕೆ.ಎಸ್.ನವೀನ್‌ ಹಾಗೂ ಇತರರು ಮೇಲ್ಮನವಿ ಸಲ್ಲಿಸಿದ್ದರು.

ಏತನ್ಮಧ್ಯೆ, ಮೇಲ್ಮನವಿಗಳು ವಿಚಾರಣೆಯ ಹಂತದಲ್ಲಿರುವಾಗಲೇ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠವು ಮಧ್ಯಂತರ ಆದೇಶವೊಂದನ್ನು ನೀಡುವ ಮೂಲಕ, ‘ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರು 2023ರ ಜುಲೈ 4ರಂದು ಮಠದ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಬೇಕು‘ ಎಂದು ನಿರ್ದೇಶಿಸಿತ್ತು. ಇದೀಗ ಎಲ್ಲ ಮೇಲ್ಮನವಿಗಳನ್ನು ವಿಲೇವಾರಿ ಮಾಡಿರುವ ನ್ಯಾಯಪೀಠವು, ಹೆಚ್ಚುವರಿ ನಿರ್ದೇಶನ ಎಂಬಂತೆ, ‘ಎಸ್‌ಜೆಎಂ ವಿದ್ಯಾಪೀಠಕ್ಕೆ ನೂತನ ಅಧ್ಯಕ್ಷರಾಗುವತನಕ ಜಿಲ್ಲಾ ಪ್ರಧಾನ ನ್ಯಾಯಾಧೀಶರೇ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು‘ ಎಂಬ ತನ್ನ ಮಧ್ಯಂತರ ಆದೇಶಕ್ಕೆ ಆಖೈರು ಮುದ್ರೆ ಒತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT