ಬೆಂಗಳೂರು: ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಭಾಗವಹಿಸಲು ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಬಂದಿರುವ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಎಐಸಿಸಿ ನಾಯಕರನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮತ್ತು ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಭೇಟಿ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.
ಸಭಾಧ್ಯಕ್ಷ ಮತ್ತು ಉಪಸಭಾಧ್ಯಕ್ಷರಾಗಿ ಆಯ್ಕೆಯಾದವರು ಪಕ್ಷದ ಚಟುವಟಿಕೆಯಿಂದ ದೂರ ಇರುತ್ತಾರೆ. ಆದರೆ, ಖಾದರ್ ಮತ್ತು ಲಮಾಣಿ ಅವರು ಈ ಶಿಷ್ಟಾಚಾರ ಮರೆತು ಬಿಜೆಪಿಯೇತರ ಪಕ್ಷಗಳ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದರು.
ಸಚಿವರಾದ ಜಿ. ಪರಮೇಶ್ವರ, ಕೆ.ಎಚ್ ಮುನಿಯಪ್ಪ, ಎಂ.ಬಿ. ಪಾಟೀಲ, ಎಚ್.ಕೆ. ಪಾಟೀಲ, ದಿನೇಶ್ ಗುಂಡೂರಾವ್, ಸತೀಶ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಕೂಡಾ ಎಐಸಿಸಿ ನಾಯಕರನ್ನು ಭೇಟಿ ಮಾಡಿದರು.