ಹರಿಹರ: ‘ರಾಜ್ಯ ಸರ್ಕಾರ 45 ದಿನದೊಳಗೆ ಪರಿಶಿಷ್ಟ ಪಂಗಡಕ್ಕೆ ಕೇಂದ್ರ ಸರ್ಕಾರದ ಮಾದರಿಯಲ್ಲಿ ಸಾಂವಿಧಾನಿಕ ಹಕ್ಕು ನೀಡದಿದ್ದರೆ ವಾಲ್ಮೀಕಿಸಮಾಜದಿಂದ ರಾಜ್ಯದಾದ್ಯಂತ ಮತ್ತೆ ಉಗ್ರ ಹೋರಾಟ ನಡೆಸಲಾಗುವುದು’ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದರು.
ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳ ಕುರಿತ ಜಿಲ್ಲಾಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.
ಮೀಸಲಾತಿ ಹೆಚ್ಚಳಕ್ಕಾಗಿ ‘ರಾಜನಹಳ್ಳಿಯಿಂದ ರಾಜಧಾನಿವರೆಗೆ’ ಪಾದಯಾತ್ರೆ ನಡೆಸಿದಾಗ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಎರಡು ತಿಂಗಳೊಳಗೆ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಭರವಸೆ ನೀಡಿದ್ದರು. ಈಗಾಗಲೇ 15 ದಿನಗಳು ಕಳೆದಿವೆ. ಹೀಗಾಗಿ 45 ದಿನಗಳೊಳಗೆ ನಮ್ಮ ಬೇಡಿಕೆಗಳು ಈಡೇರಿಸಬೇಕು’ ಎಂದು ಒತ್ತಾಯಿಸಿದರು.
‘ಮೀಸಲಾತಿ ಹೆಚ್ಚಿಸದಿದ್ದರೆ ಸಮಾಜದ ಶಾಸಕರು ಪಕ್ಷಾತೀತವಾಗಿ ರಾಜೀನಾಮೆ ನೀಡಿ, ಹೋರಾಟದಲ್ಲಿ ತೊಡಗಿಕೊಳ್ಳಲಿದ್ದಾರೆ. ಸರ್ಕಾರ ಕೂಡಲೇ ಜನಸಂಖ್ಯೆಗೆ ಅನುಗುಣವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶೇ 7.5ರಷ್ಟು ಮೀಸಲಾತಿ ನೀಡಬೇಕು’ ಎಂದು ಆಗ್ರಹಿಸಿದರು.
‘ಜನ ಜಾಗೃತಿ ಮೂಡಿಸಲು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಈಗಾಗಲೇ ಸಭೆ ನಡೆಸಲಾಗಿದೆ ಎಂದರು.