ಬೆಂಗಳೂರು: ‘ರಾಜ್ಯ ಸರ್ಕಾರಕ್ಕೆ ಬುದ್ಧಿಯೇ ಇಲ್ಲ, ಇದಕ್ಕೆ ಸರಿಯಾಗಿ ಮಾರ್ಗದರ್ಶನ ಮಾಡುವವರೇ ಇಲ್ಲ’ ಎಂದು ಹೈಕೋರ್ಟ್ ಕಿಡಿ ಕಾರಿದೆ.
ಪಶು ವೈದ್ಯರನ್ನು ತಾಲ್ಲೂಕು ಪಂಚಾಯ್ತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ (ಇ.ಒ) ಆಗಿ ನಿಯೋಜನೆ ಮಾಡಿದ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ಎಸ್.ಸುನಿಲ್ ದತ್ ಯಾದವ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ವೇಳೆ ಬೇಸರ ವ್ಯಕ್ತಪಡಿಸಿತು.
‘ಗ್ರಾಮೀಣ ಪ್ರದೇಶದಲ್ಲಿ ಪಶು ವೈದ್ಯರ ಕೊರತೆ ಇದೆ. ಆದರೆ, ಸರ್ಕಾರ ಇವರನ್ನು ಆಡಳಿತಾತ್ಮಕ ಕೆಲಸಕ್ಕೆ ಬಳಸಿಕೊಳ್ಳುತ್ತಿರುವುದು ಸರಿಯೇ’ ಎಂದು ಪ್ರಶ್ನಿಸಿದ ನ್ಯಾಯಪೀಠ, ‘ಯಾವ ಅಧಿಕಾರಿಗಳನ್ನು ಹೇಗೆ ಕೆಲಸ ಮಾಡಿಸಿಕೊಳ್ಳಬೇಕೆಂಬುದೇ ಗೊತ್ತಿಲ್ಲ’ ಎಂದು ಹೇಳಿತು.
ಅರ್ಜಿದಾರರು ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಸೂಚಿಸಿ ಅರ್ಜಿ ವಜಾ ಮಾಡಲಾಗಿದೆ.