ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವ ಕುರಿತು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಸಮರ್ಪಕವಾಗಿ ವಾದ ಮಂಡಿಸದೇ ತಪ್ಪು ಮಾಡಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಆದೇಶ ಬರುವುದಕ್ಕೂ ಮೊದಲೇ ತಮಿಳುನಾಡಿಗೆ ನೀರು ಬಿಡಬಾರದಿತ್ತು. ಸಿದ್ದರಾಮಯ್ಯ ಸರ್ಕಾರ ನೀರು ಬಿಟ್ಟು ತಪ್ಪು ಮಾಡಿದೆ ಎಂದರು.
‘ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಇದರಿಂದ ಕರ್ನಾಟಕಕ್ಕೆ ಹಿನ್ನಡೆಯಾಗಿದೆ. ಕುಡಿಯುವ ನೀರಿಗೂ ಸಂಕಷ್ಟ ಉಂಟಾಗಲಿದೆ. ಆದ್ದರಿಂದ ಕರ್ನಾಟಕದಲ್ಲಿ ಕಾವೇರಿ ನದಿಯಲ್ಲಿನ ವಾಸ್ತವ ಸ್ಥಿತಿ ಅರಿಯಲು ಒಂದು ಸಮಿತಿಯನ್ನು ರಚಿಸಲು ಮನವಿ ಮಾಡಬೇಕು. ಸಮಿತಿ ನೀಡುವ ವರದಿಯ ಆಧಾರದಲ್ಲಿ ನೀರು ಹಂಚಿಕೆ ಕುರಿತು ಆದೇಶ ನೀಡಲು ಮನವಿ ಮಾಡಬೇಕು’ ಎಂದು ಯಡಿಯೂರಪ್ಪ ಹೇಳಿದರು.
ಡಿಎಂಕೆ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವುದರಿಂದ ಅಲ್ಲಿನ ಸರ್ಕಾರದೊಂದಿಗೆ ಮುಖ್ಯಮಂತ್ರಿಯವರು ಮಾತುಕತೆ ನಡೆಸಿ, ಸಮಸ್ಯೆ ಬಗಹರಿಸಿಕೊಳ್ಳಬಹುದು ಎಂದೂ ಅವರು ಸಲಹೆ ನೀಡಿದರು.
‘ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಗೆ ಹೋಗಿರುವುದು ಮತ್ತು ಬಿಜೆಪಿ ವರಿಷ್ಠರನ್ನು ಭೇಟಿ ಮಾಡುವ ವಿಚಾರ ನನಗೆ ಗೊತ್ತಿಲ್ಲ’ ಎಂದು ಯಡಿಯೂರಪ್ಪ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.