ಬೆಂಗಳೂರು: ಕೊರೊನಾ ಸಂಕಷ್ಟದ ಅವಧಿಯಲ್ಲಿ ರಾಜ್ಯದಲ್ಲಿ ₹ 1.54 ಲಕ್ಷ ಕೋಟಿ ಮೊತ್ತದ 95 ಹೂಡಿಕೆ ಪ್ರಸ್ತಾವಗಳಿಗೆ ಒಪ್ಪಿಗೆ ನೀಡಲಾಗಿದೆ. ಕರ್ನಾಟಕವು ಹೂಡಿಕೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಕೈಗಾರಿಕೆಗಳಿಗೆ ಮುಕ್ತ ಅವಕಾಶದ ಮೂಲಕ ಕಡಿಮೆ ದರದಲ್ಲಿ ವಿದ್ಯುತ್ ಪೂರೈಸುವ ಕುರಿತು ಕರ್ನಾಟಕ ಉದ್ಯೋಗ ಮಿತ್ರ ಮಂಗಳವಾರ ಆಯೋಜಿಸಿದ್ದ ವೆಬಿನಾರ್ ನಲ್ಲಿ ಅವರು ಮಾತನಾಡಿದರು.
2019 ಮತ್ತು 2020ರಲ್ಲಿ ಏಕ ಗವಾಕ್ಷಿ ವ್ಯವಸ್ಥೆ ಮೂಲಕ 410 ಹೂಡಿಕೆ ಪ್ರಸ್ತಾವಗಳಿಗೆ ಒಪ್ಪಿಗೆ ನೀಡಲಾಗಿದೆ. ₹ 82,015 ಕೋಟಿ ಹೂಡಿಕೆ ಹರಿದು ಬಂದಿದ್ದು, 2.27 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದರು.
ಕೈಗಾರಿಕೆಗಳಿಗೆ ಕಡಿಮೆ ದರದಲ್ಲಿ ವಿದ್ಯುತ್ ಪೂರೈಸಲು ಇಂಧನ ಕ್ಷೇತ್ರದಲ್ಲಿ ಹಲವು ಸುಧಾರಣೆಗಳನ್ನು ತರಲಾಗುವುದು. ಗ್ರಿಡ್ ಗಳ ಬಳಿ ಬ್ಯಾಟರಿ ಸ್ಟೋರೇಜ್ ನಿರ್ಮಿಸುವ ಪ್ರಸ್ತಾವವಿದೆ ಎಂದರು.
ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ಆಯುಕ್ತೆ ಗುಂಜನ್ ಕೃಷ್ಣ ಮತ್ತು ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಉಪಸ್ಥಿತರಿದ್ದರು