ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜಕೀಯ ಲಾಭಕ್ಕೆ ಹಿಜಾಬ್ ಪ್ರಸ್ತಾಪ: ಶಾಸಕ ಬಸವರಾಜ ಬೊಮ್ಮಾಯಿ

Published 23 ಡಿಸೆಂಬರ್ 2023, 15:34 IST
Last Updated 23 ಡಿಸೆಂಬರ್ 2023, 15:34 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರದ ಆಡಳಿತ ವೈಫಲ್ಯವನ್ನು ಮರೆ ಮಾಚಿ ಜನರ ದಾರಿ ತಪ್ಪಿಸಲು, ರಾಜಕೀಯ ಲಾಭಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಹಿಜಾಬ್ ವಿಷಯ ಪ್ರಸ್ತಾಪ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ರಾಜ್ಯದ ಎಲ್ಲ ಕಡೆಗಳಲ್ಲಿ ಹಿಜಾಬ್ ನಿಷೇಧ ಆಗಿಲ್ಲ. ವಸ್ತ್ರ ಸಂಹಿತೆ ಜಾರಿ ಇರುವ ಕಡೆ ಮಾತ್ರ ನಿಷೇಧ ಇದೆ. ನಿಷೇಧ ಆಗದೇ ಇರುವಾಗ ಅದನ್ನು ವಾಪಸ್ ಪಡೆಯುವ ಪ್ರಶ್ನೆ ಎಲ್ಲಿ ಬಂತು ಎಂದರು.

1984ರ ಸಮಗ್ರ ಶಿಕ್ಷಣ ಕಾಯ್ದೆ ಅನ್ವಯ ಶಾಲೆಗಳಲ್ಲಿ ಸಮವಸ್ತ್ರ ಜಾರಿ ಮಾಡಲಾಗಿತ್ತು. ನಮ್ಮ ಸರ್ಕಾರದ ಅವಧಿಯಲ್ಲಿ ಅದನ್ನು ಅನುಷ್ಠಾನ ಮಾಡಲಾಯಿತು. ಹಿಜಾಬ್ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ. ಹಾಗಿದ್ದರೂ ರಾಜಕೀಯ ಕಾರಣಕ್ಕೆ ಹಿಜಾಬ್ ಪ್ರಸ್ತಾಪ ಮಾಡಿರುವುದು ಖಂಡನೀಯ. ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಕೋರ್ಟ್ ಗಮನ ಹರಿಸುತ್ತದೆ ಎಂಬ ವಿಶ್ವಾಸವಿದೆ ಎಂದೂ ಅವರು ಹೇಳಿದರು.

ಶಾಲಾ ಮಕ್ಕಳಲ್ಲಿ ಒಡಕುಂಟು ಮಾಡುವ ಉದ್ದೇಶ ಇದರ ಹಿಂದಿದೆ. ಭವಿಷ್ಯದಲ್ಲಿ ಇದು ದೊಡ್ಡ ಮಟ್ಟದ ಪರಿಣಾಮ ಬೀರುತ್ತದೆ. ತಾವು ಯಾವ ಧರ್ಮಕ್ಕೆ ಸೇರಿದ್ದೇವೆ ಎಂಬುದನ್ನು ಮಕ್ಕಳಲ್ಲಿ ಬಿತ್ತಿ, ವಿಷ ಬೀಜ ಬಿತ್ತುವ ಪ್ರಯತ್ನ ನಡೆಯುತ್ತಿದೆ.

ಹಿಜಾಬ್ ವಿಚಾರದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇರಾಕ್, ಇರಾನ್‌ನಲ್ಲಿ ಮಹಿಳೆಯರು ಹಿಜಾಬ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT