ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ಕೇರಳ ರಾಜ್ಯವನ್ನು ಸಂಪರ್ಕಿಸುವ ಎಲ್ಲ ರಸ್ತೆಗಳಲ್ಲಿ ಪ್ರಯಾಣಿಕ ವಾಹನ ಸಂಚಾರ ಬಂದ್ ಮಾಡಲಾಗಿದೆ. ಅಗತ್ಯ ವಸ್ತುಗಳನ್ನು ಸಾಗಿಸುವ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಆಂಬುಲೆನ್ಸ್ಗಳನ್ನೂ ದಕ್ಷಿಣ ಕನ್ನಡ ಜಿಲ್ಲೆಯೊಳಕ್ಕೆ ಬಿಡುತ್ತಿಲ್ಲ. ಪಾತುಞಿ ಅವರನ್ನು ಕರೆ ತಂದ ಆಂಬುಲೆನ್ಸ್ ಅನ್ನು ತಲಪಾಡಿ ಗಡಿಯಲ್ಲಿ ತಡೆದ ಪೊಲೀಸರು, ವಾಪಸ್ ಕಳುಹಿಸಿದ್ದರು. ಬೇರೆ ಮಾರ್ಗಗಳಲ್ಲಿ ಮಂಗಳೂರಿಗೆ ಬರಲು ಆಂಬುಲೆನ್ಸ್ ಚಾಲಕ ಯತ್ನಿಸಿದ್ದರೂ ಸಾಧ್ಯವಾಗಿರಲಿಲ್ಲ. ಬಳಿಕ ರೋಗಿಯನ್ನು ಮಾಡದಲ್ಲಿರುವ ಮೊಮ್ಮಗಳ ಮನೆಗೆ ವಾಪಸ್ ಕರೆದೊಯ್ಯಲಾಗಿತ್ತು. ಭಾನುವಾರ ಬೆಳಿಗ್ಗೆ ಅವರು ಮೃತಪಟ್ಟಿದ್ದಾರೆ.