ಬೆಂಗಳೂರು: ತೆಲಂಗಾಣದಲ್ಲಿ ನಡೆಯುತ್ತಿರುವ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯದಲ್ಲಿ ಜಾರಿಯಲ್ಲಿರುವ ಗೃಹಜ್ಯೋತಿ ಯೋಜನೆ ಕುರಿತು ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ, ಬೆಸ್ಕಾಂ ಪ್ರಧಾನ ವ್ಯವಸ್ಥಾಪಕ ದೂರು ನೀಡಿದ್ದು ಪೂರ್ವ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
‘ಕರ್ನಾಟಕದಲ್ಲಿ ಗೃಹಜ್ಯೋತಿ ಯೋಜನೆ ಯಶಸ್ವಿಯಾಗಿಲ್ಲ. ವಿದ್ಯುತ್ ಪೂರೈಕೆ ವ್ಯವಸ್ಥೆಯೂ ಚೆನ್ನಾಗಿಲ್ಲ’ ಎಂದು ಇಂಧನ ಸಚಿವರ ಧ್ವನಿಯನ್ನು ಕೃತಕ ಬುದ್ಧಿಮತ್ತೆ ಅಥವಾ ಬೇರೆ ಯಾವುದೋ ತಂತ್ರಜ್ಞಾನ ಬಳಸಿ ತೆಲಂಗಾಣ ರಾಜ್ಯದಲ್ಲಿ ‘ಎಕ್ಸ್’ ಖಾತೆಯಲ್ಲಿ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.