ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಭೇಟಿ ಮಾಡಿ ಚರ್ಚಿಸಿದರು.
ಶನಿವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ರಾಜಣ್ಣ, ‘ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಿಕೊಂಡು ಬರಬೇಕು ಎಂದು ಖರ್ಗೆ ಸೂಚಿಸಿದ್ದಾರೆ. ಖರ್ಗೆ ಮಾತುಗಳಿಂದ ಮತ್ತಷ್ಟು ಉತ್ಸಾಹ ಹೆಚ್ಚಿದೆ’ ಎಂದರು.
ರಾಜ್ಯದಲ್ಲಿ ಹೆಚ್ಚುವರಿಯಾಗಿ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ರಾಜಣ್ಣ ಹಲವು ಸಲ ಒತ್ತಾಯಿಸಿದ್ದರು. ‘ಭೇಟಿ ಸಂದರ್ಭದಲ್ಲಿ ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ’ ಎಂದು ರಾಜಣ್ಣ ಸ್ಪಷ್ಟಪಡಿಸಿದರು.
‘ಲೋಕಸಭಾ ಚುನಾವಣೆಗೆ 3–4 ತಿಂಗಳಷ್ಟೇ ಉಳಿದಿದೆ. ಈ ಸಂದರ್ಭದಲ್ಲಿ ಪಕ್ಷದ ವರ್ಚಸ್ಸಿಗೆ ಹಾನಿಯಾಗುವ ಹೇಳಿಕೆಗಳನ್ನು ನೀಡಬೇಡಿ’ ಎಂದು ಖರ್ಗೆ ತಾಕೀತು ಮಾಡಿದರು ಎಂದು ಮೂಲಗಳು ಹೇಳಿವೆ.