ಚಿತ್ರದುರ್ಗ: ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಲು ತೀರ್ಮಾನಿಸಿರುವ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಸಚಿವ ಸ್ಥಾನ ಸಿಗುವರೆಗೂ ಶಾಸಕರಾಗಿಯಷ್ಟೇ ಮುಂದುವರಿಯುವುದಾಗಿ ಪ್ರಕಟಿಸಿದ್ದಾರೆ.
‘ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೆ. ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಅವಕಾಶ ಸಿಗದಿರುವುದರಿಂದ ಬೇಸರವಾಗಿದೆ. ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಒಪ್ಪಿಕೊಳ್ಳುವುದಿಲ್ಲ. ಶಾಸಕನಾಗಿಯೇ ಇರುತ್ತೇನೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
‘ಸಚಿವ ಸ್ಥಾನ ಕೈತಪ್ಪಿದ್ದರಿಂದ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗುವುದಿಲ್ಲ. ಮತ್ತೊಬ್ಬರಂತೆ ಎಲ್ಲಿಗೂ ಹೋಗುವುದಿಲ್ಲ. ಪಕ್ಷಕ್ಕೆ ನಿಷ್ಠನಾಗಿದ್ದು, ಮುಖಂಡರಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸುತ್ತೇನೆ. ಚಿತ್ರದುರ್ಗ ಜಿಲ್ಲೆಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಗಮನ ಸೆಳೆಯುತ್ತೇನೆ’ ಎಂದು ಹೇಳಿದರು.
ಶಾಸಕ ರಘುಮೂರ್ತಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದರಿಂದ ಚಳ್ಳಕೆರೆ ನಗರಸಭೆಯ 16 ಕಾಂಗ್ರೆಸ್ ಸದಸ್ಯರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.