ಲೋಕೋಪಯೋಗಿ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಇಲಾಖೆ, ಸಣ್ಣ ನೀರಾವರಿ ಇಲಾಖೆಯ 500ಕ್ಕೂ ಅಧಿಕ ಎಂಜಿನಿಯರ್ಗಳನ್ನು ಶನಿವಾರ ವರ್ಗಾವಣೆ ಮಾಡಲಾಗಿದೆ. ಹಳೆಯ ದಿನಾಂಕಗಳನ್ನು (ಜುಲೈ 6ರಿಂದ 10) ನಮೂದಿಸಿ ಅಧಿಕಾರಿಗಳ ವರ್ಗಾವಣೆ ನಡೆಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.
ಲೋಕೋಪಯೋಗಿ ಇಲಾಖೆಯು 43 ಸೂಪರಿಂಟೆಂಡಿಂಗ್ ಎಂಜಿನಿಯರ್ಗಳನ್ನು ಮುಖ್ಯ ಎಂಜಿನಿಯರ್ ಹುದ್ದೆಗೆ ಬಡ್ತಿ ನೀಡಲು ಸಿದ್ಧತೆ ನಡೆಸಿತ್ತು. ಇದಕ್ಕೆ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿ.ಮಂಜುಳಾ ಅವರು ಒಪ್ಪಿಗೆ ನೀಡಿಲ್ಲ ಎಂದು ಗೊತ್ತಾಗಿದೆ.
870 ಕಿರಿಯ ಎಂಜಿನಿಯರ್ಗಳು ಹಾಗೂ ಸಹಾಯಕ ಎಂಜಿನಿಯರ್ಗಳ ನೇಮಕಕ್ಕೆ ಲೋಕೋಪಯೋಗಿ ಇಲಾಖೆಯು ಫೆಬ್ರುವರಿಯಲ್ಲಿ ಅರ್ಜಿ ಆಹ್ವಾನಿಸಿತ್ತು. ಸಾಮಾನ್ಯವಾಗಿ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತದೆ. ಆದರೆ, ಈ ಸಲ ಇಲಾಖೆಯ ವಿಶೇಷ ಆಯ್ಕೆ ಸಮಿತಿಯನ್ನು ರಚಿಸಲಾಗಿದೆ. ಜುಲೈ 22ರೊಳಗೆ ಸಂದರ್ಶನ ಪ್ರಕ್ರಿಯೆ ನಡೆಸಲು ತಯಾರಿ ನಡೆಸಲಾಗಿದೆ. ಸಂದರ್ಶನ ಪ್ರಕ್ರಿಯೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ನಿರ್ದೇಶನ ನೀಡಿದ್ದಾರೆ ಎಂದು ಗೊತ್ತಾಗಿದೆ.