ರಾಮನಗರ: ‘ರಾಜ್ಯದಲ್ಲಿ ಬರಗಾಲವಿರುವುದರಿಂದ ಜಲಾಶಯಗಳಲ್ಲೂ ನೀರು ಕಡಿಮೆಯಾಗಿದೆ. ಇದರಿಂದಾಗಿ ವಿದ್ಯುತ್ ಉತ್ಪಾದನೆ ಕುಸಿದಿದ್ದು, ಸ್ವಲ್ಪ ಲೋಡ್ ಶೆಡ್ಡಿಂಗ್ ಇದೆ’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಅಘೋಷಿತ ಲೋಡ್ ಶೆಡ್ಡಿಂಗ್ ಕುರಿತು ನಗರದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ವಿದ್ಯುತ್ಗಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಿದ್ದಾರೆ. ಜೊತೆಗೆ ನೆರೆಯ ರಾಜ್ಯಗಳ ಮೊರೆ ಹೋಗಲಾಗಿದೆ’ ಎಂದರು.
ಅನುದಾನ ಕಡಿತ ನಿಜ: ‘ಬಿಜೆಪಿ ಶಾಸಕ ಮುನಿರತ್ನ ಅವರ ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಅನುದಾನ ಕಡಿತವಾಗಿರುವುದು ನಿಜ. ಐದು ವರ್ಷದ ಹಿಂದಿನ ಸ್ಥಿತಿ ಹೇಗಿತ್ತು ಎಂಬುದನ್ನು ಮುನಿರತ್ನ ಒಮ್ಮೆ ನೆನಪಿಸಿಕೊಳ್ಳಲಿ. ಆಗ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ಕ್ಷೇತ್ರಕ್ಕೆ ₹ 400 ಕೋಟಿ ಅನುದಾನ ಕೊಟ್ಟಿದ್ದರು. ಬಿಜೆಪಿ ಬಂದ ಬಳಿಕ ₹ 260 ಕೋಟಿ ಕಡಿತ ಮಾಡಿದ್ದರು’ ಎಂದು ಗಮನ ಸೆಳೆದರು.