ತುರುವೇಕೆರೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಸಕಾಲಕ್ಕೆ ಚಿಕಿತ್ಸೆ ಸಿಗದೆ ಮಹಿಳೆಯೊಬ್ಬರು ಗುರುವಾರ ಮಧ್ಯರಾತ್ರಿ ಸಾವನ್ನಪ್ಪಿದ್ದಾರೆ.
ಪಟ್ಟಣದ ಅಗಸರ ಬೀದಿಯ ನಿರ್ಮಲ (40) ಎಂಬುವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಗುರುವಾರ ರಾತ್ರಿ 11.45ರ ಸಮಯದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆ ತಂದಿದ್ದಾರೆ. ತಕ್ಷಣ ಚಿಕಿತ್ಸೆ ನೀಡುವಂತೆ ರೋಗಿಯ ಕಡೆಯವರು ಕೇಳಿಕೊಂಡಿದ್ದಾರೆ. ಅಲ್ಲಿ ಯಾರೊಬ್ಬರೂ ಸ್ಪಂದಿಸಿಲ್ಲ. ಚಿಕಿತ್ಸೆ ನೀಡಬೇಕಾದ ವೈದ್ಯರೂ ಇರಲಿಲ್ಲ.
ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿ ಇರಬೇಕಾಗಿದ್ದ ವೈದ್ಯ ಡಾ.ಮುರಳಿ ಆಸ್ಪತ್ರೆಯಲ್ಲಿ ಇರಲಿಲ್ಲ. ವೈದ್ಯರಿಗಾಗಿ ಹುಡುಕಾಟ ನಡೆಸಿದರೂ ಲಭ್ಯವಾಗಿಲ್ಲ. ಕೊನೆಗೆ ತರಬೇತಿ ವೈದ್ಯರೊಬ್ಬರು (ಹೌಸ್ ಸರ್ಜನ್) ಚಿಕಿತ್ಸೆ ನೀಡುವ ಪ್ರಯತ್ನ ನಡೆಸಿದ್ದರೂ ಅಷ್ಟರಲ್ಲಿ ರೋಗಿ ಮೃತಪಟ್ಟರು ಎಂದು ರೋಗಿಯ ಸಂಬಂಧಿಕರು ಆರೋಪಿಸಿದ್ದಾರೆ.
ತಪ್ಪಿತಸ್ಥ ವೈದ್ಯರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಪದೇಪದೇ ಇಂತಹ ಘಟನೆಗಳು ನಡೆಯುತ್ತಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಪಟ್ಟಣದ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಬಹುತೇಕ ವೈದ್ಯರು ಖಾಸಗಿ ಕ್ಲಿನಿಕ್ ಹೊಂದಿದ್ದಾರೆ. ಇಲ್ಲಿಗೆ ಬರುವ ರೋಗಿಗಳನ್ನು ಕ್ಲಿನಿಕ್ಗೆ ಬರುವಂತೆ ಒತ್ತಾಯಿಸುತ್ತಾರೆ. ಕ್ಲಿನಿಕ್ಗಳಲ್ಲಿ ಹಣ ಕಿತ್ತುಕೊಂಡು ಶೋಷಣೆ ಮಾಡುತ್ತಿದ್ದಾರೆ. ಇಂತಹ ವೈದ್ಯರ ವಿರುದ್ಧವೂ ಕ್ರಮ ಕೈಗೊಂಡು, ಬೇರೆಡೆಗೆ ವರ್ಗಾವಣೆ ಮಾಡಬೇಕು ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಎಚ್.ಡಿ.ರುದ್ರೇಶ್ ಒತ್ತಾಯಿಸಿದ್ದಾರೆ.