ಬೆಂಗಳೂರು:ಕಲ್ಲಡ್ಕದ ಯುವಕ ನಿಶಾಂತ್ ಎಂಬುವವರ ಸಾವಿಗೆ ಸಂಬಂಧಿಸಿದಂತೆ ತಮ್ಮ ಹೆಸರಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಟ್ವೀಟ್ ತಾವು ಮಾಡಿದ್ದಲ್ಲ ಎಂದಿರುವ ಸಂಸದೆ ಶೋಭಾ ಕರಂದ್ಲಾಜೆ, ಇದು ‘ ಜಿಹಾದಿಗಳು ಮತ್ತೊಂದು ಷಡ್ಯಂತ್ರ,’ ಎಂದಿದ್ದಾರೆ.
ನಾನು ಈ ರೀತಿಯ ಯಾವುದೇ ಹೇಳಿಕೆ ಅಥವಾ ಟ್ವೀಟ್ ಮಾಡಿರುವುದಿಲ್ಲ, ಎಡಿಟೆಡ್ ಟ್ವೀಟನ್ನು ನನ್ನದೆಂದು ಬಿಂಬಿಸಲು ಪ್ರಯತ್ನಿಸಿರುತ್ತಾರೆ.
— Shobha Karandlaje (@ShobhaBJP) May 24, 2020
ಕಿಡಿಗೇಡಿಗಳ ಈ ಕೃತ್ಯಕ್ಕೆ ಸಾಥ್ ನೀಡುವ & ಸಾರ್ವಜನಿಕ ವಲಯದಲ್ಲಿ ವದಂತಿಗಳ ಮೂಲಕ ಸಾಮರಸ್ಯ-ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳುವಂತೆ @compolmlrಗೆ ಸೂಚಿಸಲಾಗಿದೆ. https://t.co/62HQefmktO pic.twitter.com/bnUsgAqEZ0
‘ಜಿಹಾದಿಗಳು ಮತ್ತೊಂದು ಷಡ್ಯಂತ್ರ ಮಾಡಿದ್ದಾರೆ. ಕಲ್ಲಡ್ಕದ ಯುವಕ ನಿಶಾಂತ್ ಸಾಯುವಾಗ ಜಿಹಾದಿಗಳಿಂದ ತೊಂದರೆಯಾಗಿದೆ ಎಂದು ನನ್ನ ಹೆಸರಲ್ಲಿ ಸುಳ್ಳು ಪೋಸ್ಟ್ ಮಾಡಿದ್ದಾರೆ. ಇದೆಲ್ಲವೂ ಸುಳ್ಳು ಸುದ್ದಿ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ತಾಣಗಳಲ್ಲಾಗಲಿ, ಮಾಧ್ಯಮಗಳಲ್ಲಾಗಲಿ ನಾನು ಹೇಳಿಕೆ ಕೊಟ್ಟಿಲ್ಲ. ಇಂಥ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಾನು ಮಂಗಳೂರು ಪೊಲೀಸರನ್ನು ಆಗ್ರಹಿಸಿದ್ದೇನೆ. ಮತಾಂಧ ಜಿಹಾದಿಗಳ ಈ ದುಷ್ಕೃತ್ಯಕ್ಕೆ ಕಾಂಗ್ರೆಸ್ ನಾಯಕರು ಸೇರಿಕೊಂಡಿರುವುದು ಅವರ ವಿಕೃತ ಮನಸ್ಥಿತಿಯನ್ನು ತೆರೆದಿಡುತ್ತದೆ,’ ಎಂದು ಅವರು ತಮ್ಮ ಹೇಳಿಕೆಯ ವಿಡಿಯೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
ನನ್ನ ಹೆಸರಿನಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸಿ, ಸಮಾಜದ ಶಾಂತಿ ಕದಡಲು ಯತ್ನಿಸುತ್ತಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ವರಿಷ್ಟರಲ್ಲಿ ಆಗ್ರಹ ಮಾಡಿರುತ್ತೇನೆ.
— Shobha Karandlaje (@ShobhaBJP) May 24, 2020
ಮತಾಂಧ ಜಿಹಾದಿಗಳ ಈ ದುಷ್ಕೃತ್ಯಕ್ಕೆ ಕಾಂಗ್ರೆಸ್ ನಾಯಕರು ಸೇರಿಕೊಂಡಿರುವುದು ಅವರ ವಿಕೃತ ಮನಸ್ಥಿತಿಯನ್ನು ತೆರೆದಿಡುತ್ತದೆ. pic.twitter.com/Y5Q1IvdkkJ
ಏನಿದು ಘಟನೆ?
ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಹನುಮಾನ್ ನಗರ ನಿವಾಸಿ ನಿಶಾಂತ್ (28) ಎಂಬ ಯುವಕ ಭಾನುವಾರ ಬೆಳಿಗ್ಗೆ ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ್ದರು. ಇದನ್ನು ಗಮನಿಸಿದ ಸ್ಥಳೀಯರಾದ ಶಮೀರ್ ಮುಹಮ್ಮದ್, ತೌಸೀಫ್, ಝಾಹಿದ್, ಜಾಯಿದ್, ಅಕ್ಕರಂಗಡಿ ಮುಖ್ತಾರ್, ಆರಿಫ್ ಮತ್ತಿತರರು ಕೂಡಲೇ ನದಿಗೆ ಹಾರಿ ರಕ್ಷಣೆಗೆ ಮುಂದಾಗಿದ್ದರು. ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ, ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದರಾದರೂ, ದಾರಿ ಮಧ್ಯದಲ್ಲಿ ನಿಶಾಂತ್ ಸಾವಿಗೀಡಾಗಿದ್ದರು.
ಇದನ್ನೂ ಓದಿ:ಮಂಗಳೂರು: ನದಿಗೆ ಹಾರಿ ಯುವಕ ಆತ್ಮಹತ್ಯೆ
ಈ ಘಟನೆಯಲ್ಲಿ ಜಿಹಾದಿಗಳ ಕೈವಾಡವಿದೆ ಎಂದು ಆರೋಪಿಸಿದ, ಶೋಭಾ ಕರಂದ್ಲಾಜೆ ಅವರ ಟ್ವೀಟ್ ಎನ್ನಲಾದ ಸ್ಕ್ರೀನ್ಶಾಟ್ವೊಂದು ಸದ್ಯ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. ಆದರೆ, ಈ ಟ್ವೀಟ್ ತಮ್ಮದ್ದಲ್ಲ, ತಾವು ಈ ರೀತಿಯ ಹೇಳಿಕೆಯನ್ನು ಎಲ್ಲಿಯೂ ದಾಖಲಿಸಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ.
ಈ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿರುವ ಹಲವರು ಶೋಭಾ ಕರಂದ್ಲಾಜೆ ಅವರ ವಿರುದ್ಧ ಟೀಕಾ ಪ್ರಹಾರ ಮಾಡಿದ್ದಾರೆ. ಕಾಂಗ್ರೆಸ್ ಶಾಸಕ ಯುಟಿ ಖಾದರ್ ಕೂಡ ಇದೇ ಸ್ಕ್ರೀನ್ ಶಾಟ್ ಹಂಚಿಕೊಂಡು ಟ್ವೀಟ್ ಮಾಡಿದ್ದು, ‘ ಏಕಿ ಮಿನಿಟ್ ಟೈಮ್ ತೆಗೆದುಕೊಂಡು, ಲಾಕ್ಡೌನ್ನಿಂದ ಒದ್ದಾಡುತ್ತಿರುವ ರಾಜ್ಯದ ಬಡವರು, ಶ್ರಮಿಕರಿಗೆ ಬೇಗ ಹಣ ಬಿಡುಗಡೆ ಮಾಡಿ ಎಂದು ಹೇಳಿದ್ದರೆ ಒಳ್ಳೆಯದಿತ್ತಾ? ಎಂದು ಶೋಭಾ ಕರಂದ್ಲಾಜೆ ಅವರನ್ನು ಪ್ರಶ್ನೆ ಮಾಡಿದ್ದಾರೆ.
ತಮ್ಮದೂ ಎನ್ನಲಾದ ಪೋಸ್ಟ್ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ ಶೋಭಾ ಕರಂದ್ಲಾಜೆ ನಕಲಿ ಪೋಸ್ಟ್ ಸೃಷ್ಟಿಸಿದವರ ವಿರುದ್ಧ ಕ್ರಮಕ್ಕೆ ಪೊಲೀಸರನ್ನು ಆಗ್ರಹಿಸಿದ್ದಾರೆ. ಅಲ್ಲದೆ, ಇದು ಜಿಹಾದಿಗಳ ದುಷ್ಕೃತ್ಯ ಎಂದು ಹೇಳಿದ್ದಾರೆ.
‘ಕಿಡಿಗೇಡಿಗಳ ಈ ಕೃತ್ಯಕ್ಕೆ ಸಾಥ್ ನೀಡುವ ಮತ್ತುಸಾರ್ವಜನಿಕ ವಲಯದಲ್ಲಿ ವದಂತಿಗಳ ಮೂಲಕ ಸಾಮರಸ್ಯ-ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಮಂಗಳೂರು ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ,’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.