ಮೈಸೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ ಒತ್ತಾಯಿಸಿದರು.
‘₹88 ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದ್ದು, ಅದನ್ನು ಸಚಿವರೇ ಒಪ್ಪಿಕೊಂಡಿದ್ದಾರೆ. ಆರ್ಥಿಕ ಇಲಾಖೆಯ ಅನುಮೋದನೆ, ಸಹಕಾರ ಇಲ್ಲದೆ ಪ್ರತ್ಯೇಕ ಖಾತೆ ತೆರೆದು ಹಣ ವರ್ಗಾವಣೆ ಮಾಡಿಕೊಳ್ಳಲು ಆಗದು. ಹೀಗಾಗಿ ಹಣಕಾಸು ಸಚಿವರೂ ಆದ ಸಿದ್ದರಾಮಯ್ಯ ಅವರೇ ಇದಕ್ಕೆ ಜವಾಬ್ದಾರರು’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಜೂನ್ 6ರ ಒಳಗೆ ರಾಜೀನಾಮೆ ನೀಡದೇ ಹೋದಲ್ಲಿ ರಾಜ್ಯದಾದ್ಯಂತ ಹೋರಾಟ ಹಮ್ಮಿಕೊಳ್ಳುವುದಾಗಿ ತಿಳಿಸಿದರು.
‘ಸಿದ್ದರಾಮಯ್ಯ ಮಾತೆತ್ತಿದರೆ ಬಿಜೆಪಿಯವರು ಜೈಲಿಗೆ ಹೋದವರು ಎನ್ನುತ್ತಾರೆ. ಈಗ ಇವರು ಯಾವ ಜೈಲಿಗೆ ಹೋಗುತ್ತಾರೆ?’ ಎಂದು ಪ್ರಶ್ನಿಸಿದರು.
‘ಭ್ರಷ್ಟಾಚಾರ ನಡೆಸಿದ ಅಧಿಕಾರಿಗಳ ಹೆಸರು ಡೆತ್ನೋಟ್ನಲ್ಲಿ ಉಲ್ಲೇಖವಿದ್ದರೂ ಎಫ್ಐಆರ್ನಲ್ಲಿ ಅವರ ಹೆಸರು ಇಲ್ಲದೇ ಇರುವುದು ನಾಚಿಕೆಗೇಡಿನ ಸಂಗತಿ. ಸರ್ಕಾರಕ್ಕೆ ನೈತಿಕತೆ ಇದ್ದರೆ ಕೂಡಲೇ ಸಂಬಂಧಿಸಿದ ಸಚಿವರು ಹಾಗೂ ಅಧಿಕಾರಿಗಳ ರಾಜೀನಾಮೆ ಪಡೆದು ಅವರನ್ನು ಜೈಲಿಗೆ ಕಳುಹಿಸಬೇಕು’ ಎಂದು ಆಗ್ರಹಿಸಿದರು.
‘ಸಿಐಡಿ ಹಾಗೂ ಎಸ್ಐಟಿ ಅಧಿಕಾರಿಗಳು ಸಾಕ್ಷ್ಯ ನಾಶ ಮಾಡುವಲ್ಲಿ ಪರಿಣತರಾಗಿದ್ದಾರೆ. ಸರ್ಕಾರದ ನಿರ್ದೇಶನದಂತೆ ನಡೆಯುವ ಪೊಲೀಸ್ ಅಧಿಕಾರಿಗಳಿಂದ ಪ್ರಕರಣಕ್ಕೆ ನ್ಯಾಯ ಒದಗಿಸಲು ಆಗದು. ಹೀಗಾಗಿ ಚಂದ್ರಶೇಖರನ್ ಹಾಗೂ ಪ್ರಜ್ವಲ್ ಎರಡೂ ಪ್ರಕರಣಗಳನ್ನು ನ್ಯಾಯಾಲಯದ ನಿರ್ದೇಶನದ ಅಡಿ ಸ್ವತಂತ್ರ ತನಿಖಾ ತಂಡ ಇಲ್ಲವೇ ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಒತ್ತಾಯಿಸಿದರು.