ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮ ಹಗರಣ | ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಡಿ.ಕೆ. ಶಿವಕುಮಾರ್

Published 30 ಮೇ 2024, 16:19 IST
Last Updated 30 ಮೇ 2024, 16:19 IST
ಅಕ್ಷರ ಗಾತ್ರ

ಬೆಂಗಳೂರು: ‘ತಪ್ಪು ಯಾರೇ ಮಾಡಿದ್ದರೂ ಕಠಿಣ ಕ್ರಮ ಜರುಗಿಸಲಾಗುವುದು. ಯಾವುದೇ ಕಾರಣಕ್ಕೂ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಕುರಿತಂತೆ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಹೀಗೆ ಪ್ರತಿಕ್ರಿಯಿಸಿದರು.

‘ಸಚಿವ ನಾಗೇಂದ್ರ ಅವರ ರಾಜೀನಾಮೆ ಕೇಳುವುದು ವಿರೋಧ ಪಕ್ಷಗಳ ಧರ್ಮ. ನಾವು ಈ ಪ್ರಕರಣದ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಈ ಪ್ರಕರಣವನ್ನು ಮುಖ್ಯಮಂತ್ರಿ ಗಂಭೀರವಾಗಿ ಪರಿಗಣಿಸಿದ್ದಾರೆ’ ಎಂದರು.

‘ಆಧಾರ ಇಲ್ಲದೇ ಆರೋಪ ಮಾಡಿದ ಮಾತ್ರಕ್ಕೆ ನಾವು ಪ್ರತಿಕ್ರಿಯೆ ನೀಡಲು ಆಗುವುದಿಲ್ಲ. ತಕ್ಷಣವೇ ಎಫ್ಐಆರ್ ದಾಖಲಿಸಿ, ವ್ಯವಸ್ಥಾಪಕ ನಿರ್ದೇಶಕರನ್ನು ಅಮಾನತು ಮಾಡಲಾಗಿದೆ. ತಪ್ಪು ಮಾಡಿರುವುದು ಸಾಬೀತಾದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ರಾಜೀನಾಮೆ ಕೇಳಿದ್ದೀರಿ, ಈಗ ಈ ವಿಚಾರದಲ್ಲಿ ಬಿಜೆಪಿಯು ಸಚಿವರ ರಾಜೀನಾಮೆ ಕೇಳುತ್ತಿದೆ’ ಎಂದಾಗ, ‘ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿ ಚಂದ್ರಶೇಖರನ್ ಮರಣ ಪತ್ರದಲ್ಲಿ ಸಚಿವರ ಮೌಖಿಕ ಆದೇಶವಿದೆ ಎಂದು ಅಧಿಕಾರಿಗಳು ಹೇಳಿದ್ದರು ಎಂದು ಇದೆ. ನಾಗೇಂದ್ರ ವಿರುದ್ಧ ನೇರ ಆರೋಪವಿಲ್ಲ. ಈ ವಿಚಾರದಲ್ಲಿ ಸರ್ಕಾರ ತನಿಖೆ ಮಾಡಲಿದೆ. ಇದು ಸಣ್ಣ ವಿಚಾರವಲ್ಲ’ ಎಂದರು.

‘ಸತ್ಯ ಬಯಲಾಗದೆ ತೀರ್ಮಾನ ಹೇಗೆ’: 

‘ಮರಣ ಪತ್ರದಲ್ಲಿ ಚಂದ್ರಶೇಖರನ್ ಕೆಲವು ಆರೋಪಗಳನ್ನು ಮಾಡಿದ್ದಾರೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಸತ್ಯಾಸತ್ಯತೆ ಹೊರ ಬರಲಿದೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಸಿ. ಮಹದೇವಪ್ಪ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇಲ್ಲಿ ದಲಿತರು, ದಲಿತೇತರರ ಹಣ ಎಂದಲ್ಲ. ಅದು ಸರ್ಕಾರದ ಹಣ. ಅಂತೆಕಂತೆಗಳ ಮೇಲೆ ಮಾತನಾಡುವುದು ಸರಿಯಲ್ಲ. ಕೆ.ಎಸ್. ಈಶ್ವರಪ್ಪ ಪ್ರಕರಣವೇ ಬೇರೆ, ನಿಗಮದ ಹಣ ವರ್ಗಾವಣೆ ಪ್ರಕರಣವೇ ಬೇರೆ’ ಎಂದು ಅಭಿಪ್ರಾಯಪಟ್ಟರು.

‘ಬಿಜೆಪಿ ವಿರೋಧ ಪಕ್ಷ ಆಗಿರುವರಿಂದ, ಆ ಪಕ್ಷದವರು ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಸತ್ಯಾಸತ್ಯತೆ ಹೊರಗಡೆ ಬಾರದೆ ತೀರ್ಮಾನ ತೆಗೆದುಕೊಳ್ಳುವುದು ಹೇಗೆ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT