ಮಂಡ್ಯ ಜಿಲ್ಲೆ ಕೆರಗೋಡು ಧ್ವಜಸ್ತಂಭ ಪ್ರಕರಣ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗುತ್ತಿದೆ. ಅದರಲ್ಲಿಯೂ, ಕೆರಗೋಡು ರಾಜಕೀಯ ನಾಯಕರ ಪ್ರತಿಭಟನಾ ಕೇಂದ್ರವಾಗಿ ಮಾರ್ಪಟ್ಟಿದೆ. ವಿಧಾನಸಭೆ ವಿರೋಧಪಕ್ಷದ ನಾಯಕ, ಬಿಜೆಪಿಯ ಆರ್. ಅಶೋಕ್ ಭಾನುವಾರವೇ ಕೆರಗೋಡಿಗೆ ತೆರಳಿ ಪ್ರತಿಭಟನೆ ಮಾಡಿದರೆ, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ರಾಜ್ಯಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೋಮವಾರ ಪ್ರತಿಭಟನೆ ನಡೆಸಿ, ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಕೋಮು ಸೌಹಾರ್ದಕ್ಕೆ ಹೆಸರಾಗಿದ್ದ ಮಂಡ್ಯದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ದುರದೃಷ್ಟಕರ ಎಂದು ಸ್ಥಳೀಯ ಮುಖಂಡರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.