ಬೆಂಗಳೂರು: ರಾಜ್ಯದಲ್ಲಿ ಚಳಿ ಪ್ರಭಾವ ತೀವ್ರಗೊಂಡಿದ್ದು ವಿಜಯಪುರ ಜಿಲ್ಲೆಯಲ್ಲಿ ಮಂಗಳವಾರ ಅತ್ಯಂತ ಕನಿಷ್ಠ ಉಷ್ಣಾಂಶ 10.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ತಣ್ಣನೆ ವಾತಾವರಣ ಹಗಲು ವೇಳೆಯಲ್ಲೂ ಜನರ ಮೈನಡುಗಿಸುತ್ತಿದೆ.
ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಭಾಗದ ಜಿಲ್ಲೆಗಳಲ್ಲಿ ಸಾಮಾನ್ಯಕಿಂತಲೂ ಉಷ್ಣಾಂಶ ಕುಸಿದಿದ್ದು, ಇದರಿಂದ ಚಳಿ ಪ್ರಭಾವ ಹೆಚ್ಚಿದೆ.
ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬೆಳಿಗ್ಗೆ ಹಾಗೂ ಸಂಜೆ ತಾಪಮಾನ ಕುಸಿದು ಮೈಕೊರೆಯುವ ಚಳಿ ವಾತಾವರಣ ಕಂಡುಬರುತ್ತಿದೆ.
ಮುಂದಿನ 48 ಗಂಟೆಗಳಲ್ಲಿ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಭಾಗದಲ್ಲಿ ಬೆಳಿಗ್ಗೆ ಮಂಜು ಮುಸುಕಿದ ವಾತಾವರಣ ಕಂಡುಬರಲಿದ್ದು, ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.