ಬೆಂಗಳೂರು: 'ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ'ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮುಖ್ಯಮಂತ್ರಿ ಮಾತನಾಡಿದರು.
'ನಾವೆಲ್ಲರೂ ಶ್ರೀ ರಾಮಚಂದ್ರರಾಮನ ಭಕ್ತರೇ. ಬಿಜೆಪಿ ರಾಜಕೀಯವಾಗಿ ಮಾತನಾಡುತ್ತಿದ್ದು, ಅದಕ್ಕೆ ಔಷಧಿ ಇಲ್ಲ' ಎಂದರು.
ರಾಮಮಂದಿರ ಉದ್ಘಾಟನೆಯ ಬಗ್ಗೆ ಪಕ್ಷದ ನಿಲುವನ್ನು ಸ್ವಾಗತಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಪಕ್ಷದ ತೀರ್ಮಾನವೇ ನಮ್ಮ ತೀರ್ಮಾನ' ಎಂದರು.
'ನಾವು ರಾಮಚಂದ್ರನನ್ನು ಪೂಜಿಸಿ, ಭಜಿಸಿ, ರಾಮಮಂದಿರವನ್ನು ಕಟ್ಟಿದ್ದೇವೆ. ದೇವರ ಹೆಸರಲ್ಲಿ ರಾಜಕೀಯ ಮಾಡುವುದಕ್ಕೆ ವಿರೋಧವಾಗಿದ್ದೇವೆ ಅಷ್ಟೇ' ಎಂದರು.
'ಬಿಜೆಪಿಯವರು ಅಯೋಧ್ಯೆಗೆ ಏಕೆ ಹೋಗುತ್ತಾರೆ. ಶ್ರೀ ರಾಮಚಂದ್ರ ಇಲ್ಲಿ ಇಲ್ಲವೇ, ನಮ್ಮಲ್ಲಿರುವ ಶ್ರೀರಾಮನಿಗೆ ಬೆಲೆ ಇಲ್ಲವೇ' ಎಂದು ಮುಖ್ಯಮಂತ್ರಿ, ಪ್ರಶ್ನಿಸಿದರು.
ದೇವಸ್ಥಾನಗಳಲ್ಲಿ ಪೂಜೆಗೆ ಸೂಚಿಸಿಲ್ಲ' 'ಸರ್ಕಾರ ವತಿಯಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ನಾನು ಸೂಚಿಸಿಲ್ಲ' ಎಂದರು.