ಬೆಂಗಳೂರು: ರಾಜ್ಯದ ವಿವಿಧೆಡೆ ಮುಂದಿನ ಆರು ದಿನಗಳು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಯಾದಗಿರಿ, ರಾಯಚೂರು, ಗದಗ, ಹಾವೇರಿ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಯ ಒಂದೆರಡು ಕಡೆ ಗುರುವಾರ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಕೋಲಾರ ಹೊರತುಪಡಿಸಿ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗುವ ಸಂಭವವಿದೆ. ಕರಾವಳಿಯ ಜಿಲ್ಲೆಗಳಲ್ಲಿ ಶನಿವಾರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿಯೂ ಒಂದೆರಡು ಕಡೆ ಮಳೆ ಮುಂದುವರಿಯಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಇದೇ 13ರವರೆಗೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳು ರಾಜ್ಯದ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಿಲ್ಲ ಎಂದು ಇಲಾಖೆ ಹೇಳಿದೆ.
ಬುಧವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಬಾಗಲಕೋಟೆಯಲ್ಲಿ ಗರಿಷ್ಠ (41 ಡಿಗ್ರಿ ಸೆಲ್ಸಿಯಸ್) ಉಷ್ಣಾಂಶ ವರದಿಯಾಗಿದೆ.