ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ; ತಜ್ಞರ ಸಮಿತಿ ವರದಿ ನಿರೀಕ್ಷೆಯಲ್ಲಿ ಕೇಂದ್ರ

Published 5 ಫೆಬ್ರುವರಿ 2024, 23:30 IST
Last Updated 5 ಫೆಬ್ರುವರಿ 2024, 23:30 IST
ಅಕ್ಷರ ಗಾತ್ರ

ನವದೆಹಲಿ: ‘ಪಶ್ಚಿಮಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಗಳ ಕರಡು ಅಧಿಸೂಚನೆ ಅಂತಿಮಗೊಳಿಸಲು ತಜ್ಞರ ಸಮಿತಿಯ ಶಿಫಾರಸುಗಳಿಗೆ ಕಾಯುತ್ತಿದ್ದೇವೆ’ ಎಂದು ಕೇಂದ್ರ ಪರಿಸರ ಹಾಗೂ ಅರಣ್ಯ ಖಾತೆಯ ರಾಜ್ಯ ಸಚಿವ ಅಶ್ವಿನ್‌ ಕುಮಾರ್‌ ಚೌಬೆ ತಿಳಿಸಿದ್ದಾರೆ. 

ಲೋಕಸಭೆಯಲ್ಲಿ ಸೋಮವಾರ ಈ ಬಗ್ಗೆ ಲಿಖಿತ ಉತ್ತರ ನೀಡಿರುವ ಸಚಿವರು, ‘ಕರ್ನಾಟಕ, ತಮಿಳುನಾಡು, ಕೇರಳ, ಗುಜರಾತ್‌, ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲಿ ವ್ಯಾಪಿಸಿರುವ 56,825 ಚದರ ಕಿ.ಮೀ ವಿಸ್ತೀರ್ಣವನ್ನು  ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಸಚಿವಾಲಯವು 2022ರ ಜುಲೈ 6ರಂದು ಐದನೇ ಬಾರಿ ಕರಡು ಅಧಿಸೂಚನೆ ಹೊರಡಿಸಿತ್ತು. ಪರಿಸರ ಸೂಕ್ಷ್ಮ ಪ್ರದೇಶ ಕಡಿಮೆ ಮಾಡಬೇಕು ಎಂದು ಕರ್ನಾಟಕ ಸೇರಿ ಉಳಿದ ರಾಜ್ಯಗಳು ಒತ್ತಾಯಿಸಿದ್ದವು. ರಾಜ್ಯ ಸರ್ಕಾರಗಳ ತಕರಾರಿನಿಂದಾಗಿ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ’ ಎಂದು ತಿಳಿಸಿದ್ದಾರೆ. 

‘ರಾಜ್ಯಗಳ ಆಕ್ಷೇಪದ ಬಗ್ಗೆ ಪರಿಶೀಲನೆ ನಡೆಸಲು ಸಚಿವಾಲಯದ ನಿವೃತ್ತ ಮಹಾನಿರ್ದೇಶಕರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿದೆ. ರಾಜ್ಯಗಳಿಗೆ ಭೇಟಿ ನೀಡಿ ಸಮಾಲೋಚಿಸಿ ವರ್ಷದೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿತ್ತು. ಈ ಸಮಿತಿಯು ರಾಜ್ಯಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಹಾಗೂ ಪಶ್ಚಿಮಘಟ್ಟಗಳ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದೆ. ಈ ಸಮಿತಿ ಇನ್ನೂ ವರದಿ ಸಲ್ಲಿಸಿಲ್ಲ. ಹೀಗಾಗಿ, ಸಮಿತಿಯ ಅಧಿಕಾರದ ಅವಧಿಯನ್ನು 2024ರ ಮಾರ್ಚ್‌ 31ರ ವರೆಗೆ ವಿಸ್ತರಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ. 

ಪಶ್ಚಿಮಘಟ್ಟದ ಜೀವ ವೈವಿಧ್ಯದ ಸಂರಕ್ಷಣೆಗೆ ಉದ್ದೇಶದಿಂದ ವಿಜ್ಞಾನಿ ಮಾಧವ ಗಾಡ್ಗಿಳ್‌ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಸಮಿತಿ ರಚಿಸಿತ್ತು. ಈ ಸಮಿತಿಯು 2011ರ  ಆಗಸ್ಟ್‌ 31ರಂದು ವರದಿ ಸಲ್ಲಿಸಿತ್ತು. ಪಶ್ಚಿಮಘಟ್ಟದ 1,29,037 ಚದರ ಕಿ.ಮೀ ವ್ಯಾಪ್ತಿಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಬಹುದು ಎಂದು ಶಿಫಾರಸು ಮಾಡಿತ್ತು. ಈ ವರದಿಗೆ ರಾಜಕೀಯ ವಲಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಆ ಬಳಿಕ ಕೇಂದ್ರ ಸರ್ಕಾರವು ಡಾ.ಕೆ.ಕಸ್ತೂರಿ ರಂಗನ್‌ ಸಮಿತಿಯನ್ನು 2013ರಲ್ಲಿ ರಚಿಸಿತ್ತು. ಪಶ್ಚಿಮಘಟ್ಟದ ಶೇ 37ರಷ್ಟು ಅರಣ್ಯ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಬೇಕು ಎಂದು ಸಮಿತಿ ಶಿಫಾರಸು ಮಾಡಿತ್ತು. ಈ ವರದಿಗೂ ರಾಜಕಾರಣಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT