ಗೋಕಾಕ: ‘ಕ್ಷೇತ್ರದಲ್ಲಿ ಶೈಕ್ಷಣಿಕ ಪ್ರಗತಿಗಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳು ಅವುಗಳ ಸದುಪಯೋಗ ಪಡೆದುಕೊಂಡು ಪ್ರತಿಭಾನ್ವಿತರಾಗಿ ಹೊರಹೊಮ್ಮಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಇಲ್ಲಿಯ ಆಶ್ರಯ ಬಡಾವಣೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ₹ 3.25 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿನಿಲಯ ಹಾಗೂ ₹ 1 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಅಲೆಮಾರಿ, ಅರೆ-ಅಲೆಮಾರಿ ಮಕ್ಕಳ ಆಶ್ರಯ ಶಾಲೆಯ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.
‘ಮೂಲ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸಲಾಗುತ್ತಿದೆ. ಅಧಿಕಾರಿಗಳು, ಶಿಕ್ಷಕರು ಮತ್ತು ಪಾಲಕರ ಸಹಕಾರದಿಂದ ಮಕ್ಕಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಿಂಚುವ ಮೂಲಕ ಕ್ಷೇತ್ರದ ಕೀರ್ತಿ ಹೆಚ್ಚಿಸಬೇಕು’ ಎಂದರು.
ಇದಕ್ಕೂ ಮುನ್ನ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ₹ 1 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ 6 ಕೊಠಡಿಗಳ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಬಸವೇಶ್ವರ ವೃತ್ತದಲ್ಲಿ ರಸ್ತೆ ವಿಭಜಕಗಳಲ್ಲಿ ನಗರಸಭೆಯಿಂದ ವಿದ್ಯುತ್ ದೀಪಗಳ ಅಳವಡಿಕೆ ಕಾಮಗಾರಿಗೆ ಚಾಲನೆ ನೀಡಿದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾ ಪಂಚಾಯಿತಿ ಸದಸ್ಯರಾದತುಕಾರಾಮ ಕಾಗಲ ಮತ್ತು ಮಡ್ಡೆಪ್ಪ ತೋಳಿನವರ, ನಗರಸಭೆ ಸದಸ್ಯರಾದ ಎಸ್.ಎ.ಕೋತವಾಲ, ಗಿರೀಶ ಖೋತ, ವಕೀಲ ಶಂಕರ ಧರೆನ್ನವರ, ಜಯಾನಂದ ಹುಣಶ್ಯಾಳಿ, ಸಿದ್ದಪ್ಪ ಹುಚ್ಚರಾಯಪ್ಪಗೋಳ, ಬಸವರಾಜ ಆರೆನ್ನವರ ಇದ್ದರು.