ಬೆಂಗಳೂರು: ‘ನನಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ’ ಎಂದು ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನನ್ನ ಮಗ ರಾಜಕೀಯಕ್ಕೆ ಬರುವುದಿಲ್ಲ, ರಾಜಕಾರಣಿಯೂ ಆಗುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.
‘ನಾನು ಬಿಜೆಪಿ ಬಿಡುತ್ತೇನೆ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಬಿಜೆಪಿ ಬಿಡುವ ಮನಸ್ಸಿಲ್ಲ. ವಿಧಾನಸಭೆ ಚುನಾವಣೆಯ ವೇಳೆಯಲ್ಲೂ ಇದೇ ರೀತಿ ಸುಳ್ಳು ಸುದ್ದಿ ಹಬ್ಬಿಸಿದ್ದರು. ಇತ್ತೀಚೆಗೆ ಪಕ್ಷದಿಂದ ಅಮಾನತುಗೊಂಡ ವ್ಯಕ್ತಿ ಇದರ ಹಿಂದೆ ಇದ್ದರು. ಇನ್ನೂ ಕೆಲವರು ಇದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದೇನೆ’ ಎಂದರು.
‘ದೆಹಲಿಗೆ ಬರುವಂತೆ ವರಿಷ್ಠರಿಂದ ಕರೆ ಬಂದಿಲ್ಲ. ಬಂದರೆ ಹೋಗಲು ಸಿದ್ಧನಿದ್ದೇನೆ’ ಎಂದೂ ಸೋಮಶೇಖರ್ ಹೇಳಿದರು.
ಅಶೋಕ ಜತೆ ಸಭೆ: ಈ ಮಧ್ಯೆ ಎಸ್.ಟಿ.ಸೋಮಶೇಖರ್ ಅವರು ಶಾಸಕ ಆರ್.ಅಶೋಕ ಅವರನ್ನು ಭೇಟಿ ಮಾಡಿ ಸುಮಾರು ಒಂದು ಗಂಟೆ ಕಾಲ ಮಾತುಕತೆ ನಡೆಸಿದರು.
ಬಳಿಕ ಮಾತನಾಡಿದ ಅಶೋಕ, ‘ಸೋಮಶೇಖರ್ ಜತೆ ಸುದೀರ್ಘ ಮಾತುಕತೆ ನಡೆಸಿದ್ದೇನೆ. ಪಕ್ಷ ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಅವರ ಕ್ಷೇತ್ರದಲ್ಲಿನ ಕೆಲವು ಸಮಸ್ಯೆಗಳ ಬಗ್ಗೆ ಹೇಳಿ, 5–6 ಹೆಸರುಗಳನ್ನು ತಿಳಿಸಿದ್ದಾರೆ. ಅದನ್ನು ನಾನು ಪಕ್ಷದ ಅಧ್ಯಕ್ಷರ ಗಮನಕ್ಕೆ ತರುತ್ತೇನೆ. ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.