ಸಚಿವರಾದ ಸತೀಶ ಜಾರಕಿಹೊಳಿ, ಜಮೀರ್ ಅಹಮದ್ ಖಾನ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿ ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಿದರು.
ಆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಜಾರಕಿಹೊಳಿ, ʼಯತೀಂದ್ರ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗುವುದು ನಿಶ್ಚಿತʼ ಎಂದರು.
ʼವಿಧಾನ ಪರಿಷತ್ ಚುನಾವಣೆ ಕುರಿತು ಚರ್ಚಿಸಿದ್ದೇವೆ. ಪರಿಷತ್ ಸದಸ್ಯ ಸ್ಥಾನಗಳು ಬೆಂಗಳೂರಿಗೆ ಸೀಮಿತ ಆಗಬಾರದು ಎಂಬುದನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದೇವೆ. ಪಕ್ಷಕ್ಕಾಗಿ ದುಡಿದಿರುವ ಬಹಳಷ್ಟು ಮಂದಿ ಇದ್ದು, ಅಂತಹವರಿಗೆ ಅವಕಾಶ ನೀಡುವಂತೆ ಕೇಳಿದ್ದೇವೆʼ ಎಂದು ಹೇಳಿದರು.
ಕೆಲವರನ್ನು ಅನಿವಾರ್ಯವಾಗಿ ಮುಂದುವರಿಸಬೇಕಾಗುತ್ತದೆ. ಉಳಿದಂತೆ ಜಾತಿವಾರು ಪ್ರಾತಿನಿಧ್ಯ ನೀಡುವಂತೆ ಕೇಳಿದ್ದೇವೆ. ಲಂಬಾಣಿ ಹಾಗೂ ಅಲ್ಪಸಂಖ್ಯಾತ ಸಮುದಾಯದವರಿಗೆ ಪ್ರಾತಿನಿಧ್ಯ ಕಲ್ಪಿಸುವಂತೆ ಒತ್ತಾಯಿಸಿದ್ದೇವೆ ಎಂದರು.