ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಉಂಟಾಗಿರುವ ಗೊಂದಲ ಪರಿಹರಿಸಲು ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್, ಈ ಬಗ್ಗೆ ದೂರು ನೀಡಿದವರನ್ನು ಇದೇ 20 ಮತ್ತು 21 ದೆಹಲಿಗೆ ಬರುವಂತೆ ಆಹ್ವಾನಿಸಿದೆ.
‘ಫೇಮ್’ ಸಂಸ್ಥೆ ಚುನಾವಣೆ ನಡೆಸಿದ್ದು, ಫಲಿತಾಂಶವನ್ನು ಜ 31 ಮತ್ತು ಫೆ. 4ರಂದು ಪ್ರಕಟಿಸಲಾಗಿತ್ತು. ಆದರೆ, ತಿರಸ್ಕರಿಸಿದ ಮತಗಳ ಬಗ್ಗೆ ಅನುಮಾನಗಳಿದ್ದು, ಮರ ಎಣಿಕೆಗೆ ಆಗ್ರಹಿಸಿ 500ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಮುಖಂಡರು ಎಐಸಿಸಿಗೆ ದೂರು ನೀಡಿದ್ದಾರೆ.
ಚುನಾವಣೆಯಲ್ಲಿ ಹೆಚ್ಚು ಮತ ಗಳಿಸಿದ್ದ ಮೊಹಮ್ಮದ್ ನಲಪಾಡ್ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನ ಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು. ಈ ವಿಷಯದಲ್ಲಿ ಹಗ್ಗಜಗ್ಗಾಟ ಮುಂದುವರಿದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತಗಳನ್ನು ತಿರಸ್ಕರಿಸಿರುವ ಬಗ್ಗೆ ರಕ್ಷಾ ರಾಮಯ್ಯ ಕೂಡಾ ದೆಹಲಿಗೆ ತೆರಳಿ ವರಿಷ್ಠರಿಗೆ ದೂರು ನೀಡಿದ್ದಾರೆ.
ಚುನಾವಣೆ ಹೊಣೆ ನಿಭಾಯಿಸಿದ್ದ ಪಕ್ಷದ ವರಿಷ್ಠರು ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಮತಗಳನ್ನು ತಿರಸ್ಕರಿಸಲು ಕಾರಣವಾದ ಅಂಶಗಳ ಬಗ್ಗೆ ಮಾಹಿತಿ ನೀಡಲು ತೀರ್ಮಾನಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.