ಬೆಂಗಳೂರು: ‘ಅಕ್ರಮ-ಸಕ್ರಮ’ ಯೋಜನೆ ಜಾರಿ ಹಿನ್ನೆಲೆಯಲ್ಲಿ ಕರ್ನಾಟಕ ನಗರ ಮತ್ತು ಗ್ರಾಮ ಯೋಜನಾ ಕಾಯ್ದೆಗೆ ತಿದ್ದುಪಡಿ ತರುವ ರಾಜ್ಯ ಸರ್ಕಾರದ ಪ್ರಸ್ತಾವವನ್ನು ಮರು ಪರಿಶೀಲಿಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಸ್ವಾಗತಿಸಿದೆ.
‘ಹೈಕೋರ್ಟ್ ನೀಡಿರುವ ಆದೇಶ ಉತ್ತಮವಾಗಿದೆ. ಸರ್ಕಾರ ಕೂಡಲೇ ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಪಡೆದು ಅದನ್ನು ಗಂಭೀರವಾಗಿ ಪರಿಗಣಿಸಿ ಕಾಯ್ದೆಗೆ ತಿದ್ದುಪಡಿ ತರುವುದು ಸೂಕ್ತ’ ಎಂದು ಎಫ್ಕೆಸಿಸಿಐ ಅಧ್ಯಕ್ಷ ಎನ್.ಎಸ್. ಶ್ರೀನಿವಾಸಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಜಾರಿಗೆ ಮುನ್ನ ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕು. ನಿವೇಶನಗಳ ಅಳತೆಗೆ ಅನುಗುಣವಾಗಿ ಶುಲ್ಕ ವಿಧಿಸಬೇಕು. ಯೋಜನೆಗೆ ನಗರದ ಹಳೆಯ ಬಡಾವಣೆಗಳನ್ನು ಪರಿಗಣಿಸಬಾರದು. ಹಾಗೆಯೇ ರಾಜ ಕಾಲುವೆ, ಕೆರೆ ಪ್ರದೇಶ, ಉದ್ಯಾನ ಸೇರಿದಂತೆ ನಾಗರಿಕರ ಬಳಕೆಗೆ ಮೀಸಲಿಟ್ಟ ಪ್ರದೇಶಗಳಲ್ಲಿ ನಿರ್ಮಾಣಗೊಂಡ ಕಟ್ಟಡಗಳನ್ನು ಸಕ್ರಮಗೊಳಿಸಬಾರದು’ ಎಂದು ಹೇಳಿದ್ದಾರೆ.