ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸೂಕ್ತ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆದಿದ್ದು, ಸದ್ಯದಲ್ಲೇ ಆ ಕುರಿತು ಚರ್ಚೆಗಳೂ ಆರಂಭವಾಗಲಿವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಸೋಮವಾರ ಇಲ್ಲಿ ತಿಳಿಸಿದರು.
ದಕ್ಷಿಣ ಭಾರತದ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.
ಆದಷ್ಟು ಬೇಗ ಪಕ್ಷದ ಕೋರ್ ಕಮಿಟಿ ಸಭೆ ಸೇರಿ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಲಿದೆ. ಮುಂದಿನ ತಿಂಗಳ ಅಂತ್ಯದ ವೇಳೆಗೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಸಿದ್ಧಪಡಿಸಲಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದಲ್ಲಿ ಆಂತರಿಕ ಬೇಗುದಿ ಹೆಚ್ಚಾಗಿದೆ. ಇದುವರೆಗೂ ಸಚಿವರು ಮತ್ತು ಮುಖ್ಯಮಂತ್ರಿಗಳ ನಡುವೆ ಇದ್ದ ತಿಕ್ಕಾಟ ಈಗ ರಾಜ್ಯಪಾಲರವರೆಗೂ ವಿಸ್ತರಿಸಿದೆ. ರಾಜ್ಯಪಾಲರೇ ನೇರವಾಗಿ ಸಚಿವರ ಕಾರ್ಯವೈಖರಿ ಬಗ್ಗೆ ಟೀಕೆ ಮಾಡಿದ್ದಾರೆ. ಹೀಗಾಗಿ ಈ ಸರ್ಕಾರ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದರು.