ಬೆಂಗಳೂರು: ಅರ್ಕಾವತಿ ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸ್ವಾಧೀನಪಡಿಸಿಕೊಂಡಿದ್ದ 984 ಎಕರೆ ಜಮೀನಿನ ಡಿನೋಟಿಫೈ ವಿವಾದ ಕುರಿತು ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಎಚ್.ಎಸ್.ಕೆಂಪಣ್ಣ ಆಯೋಗವು, ಖುದ್ದಾಗಿ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ.
‘ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆ ಶಾಮೀಲಾಗಿ ಅರ್ಕಾವತಿ ಬಡಾವಣೆಯ ಜಮೀನನ್ನು ಡಿನೋಟಿಫಿಕೇಷನ್ ಮಾಡಿದ್ದಾರೆ ಎಂಬ ಆರೋಪ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿದೆ’ ಎಂದು ಮೂಲಗಳು ತಿಳಿಸಿವೆ.
ಬಿಡಿಎ ಆಯುಕ್ತ ಟಿ. ಶ್ಯಾಂಭಟ್ ಹೆಸರು ಕೂಡ ದೂರಿನಲ್ಲಿ ಉಲ್ಲೇಖವಾಗಿದೆ. ವಿಚಾರಣೆಗೆ ಹಾಜರಾಗುವಂತೆ ಅವರಿಗೂ ನೋಟಿಸ್ ನೀಡಬಹುದು ಎಂದು ಮೂಲಗಳು ತಿಳಿಸಿವೆ.
ಕಠಿಣ ಕ್ರಮ
ಬಿಡಿಎ ಮತ್ತು ಸರ್ಕಾರದ ವಿವಿಧ ಇಲಾಖೆಗಳ ಉತ್ತರಕ್ಕಾಗಿ ಆಯೋಗ ಕಾಯುತ್ತಿದೆ. ಡಿನೋಟಿಫಿಕೇಷನ್ ಪ್ರಕರಣಗಳ ಕಡತಗಳನ್ನೂ ನಿರೀಕ್ಷಿಸುತ್ತಿದ್ದೇವೆ. ಆದರೆ, ಇದಕ್ಕೆ ನಿರ್ದಿಷ್ಟ ದಿನಾಂಕ ನಿಗದಿ ಮಾಡಿಲ್ಲ. ಆದಷ್ಟು ಬೇಗ ಕಳುಹಿಸುವಂತೆ ಕೋರಿದ್ದೇವೆ. ಆದರೆ ಹೆಚ್ಚು ವಿಳಂಬ ಮಾಡಿದರೆ ನಾವು ಕಠಿಣ ಕ್ರಮದ ಎಚ್ಚರಿಕೆ ನೀಡಬೇಕಾಗುತ್ತದೆ.
-ಎನ್.ಶ್ರೀವತ್ಸ ಕೆದಿಲಾಯ, ಆಯೋಗದ ಕಾರ್ಯದರ್ಶಿ