ಬೆಳಗಾವಿ: `ಸುವರ್ಣ ವಿಧಾನಸೌಧ ಉದ್ಘಾಟನೆಯಿಂದ ಉತ್ತರ ಕರ್ನಾಟಕದ ಭಾಗ್ಯದ ಬಾಗಿಲು ತೆರೆದಂತಾಗಿದೆ. ಉತ್ತರ ಕರ್ನಾಟಕದ ಜನರ ಆಶೋತ್ತರಗಳಿಗೆ ಇದೊಂದು ವೇದಿಕೆಯಾಗಿ ಸ್ಪಂದಿಸಲಿದೆ~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಗುರುವಾರ ನಡೆದ ಸುವರ್ಣ ವಿಧಾನಸೌಧ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, `ಸುವರ್ಣ ವಿಧಾನ ಸೌಧದಲ್ಲಿ ಪ್ರತಿ ವರ್ಷ ಚಳಿಗಾಲದ ಅಧಿವೇಶನ ನಡೆಸುವ ಮೂಲಕ ಉತ್ತರ ಕರ್ನಾಟಕದ ಪ್ರಗತಿಯ ಜೊತೆಗೆ ನಾಡಿನ ಸಮಗ್ರ ಅಭಿವೃದ್ಧಿಗೆ ನಾಂದಿ ಹಾಡಲಾಗುವುದು.
ಸುವರ್ಣ ವಿಧಾನಸೌಧವು ಈ ಭಾಗದ ಏಕತೆಗೆ ಸಹಕಾರಿಯಾಗಲಿದೆ. ಇಲ್ಲಿ ಸಚಿವ ಸಂಪುಟ ಸಭೆ, ರಾಜ್ಯ- ರಾಷ್ಟ್ರ ಮಟ್ಟದ ವಿಚಾರ ಸಂಕಿರಣಗಳು ಕಾಲ ಕಾಲಕ್ಕೆ ನಡೆಯಲಿವೆ~ ಎಂದು ತಿಳಿಸಿದರು.
`ಜೆಡಿಎಸ್ ಹಾಗೂ ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಳಗಾವಿಯಲ್ಲಿ ನಡೆಸಿದ ಅಧಿವೇಶನದಲ್ಲಿ ಸುವರ್ಣ ಸೌಧ ನಿರ್ಮಿಸುವ ಘೋಷಣೆ ಮಾಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದಕ್ಕೆ ಭೂಮಿ ಪೂಜೆ ಮಾಡಿ ನಿರ್ಮಿಸಿದರು.
ಉತ್ತರ ಕರ್ನಾಟಕದವನಾದ ನಾನು ಮುಖ್ಯಮಂತ್ರಿಯಾಗಿರುವಾಗ ಈ ಭವ್ಯ ಕಟ್ಟಡ ಉದ್ಘಾಟನೆಯಾಗುತ್ತಿರುವುದು ನನ್ನ ಸುದೈವ. ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಇಬ್ಬರೂ ಅಭಿನಂದನಾರ್ಹ~ ಎಂದು ಶೆಟ್ಟರ್ ಮುಕ್ತ ಕಂಠದಿಂದ ಶ್ಲಾಘಿಸಿದರು.