ಉಪ್ಪಿನಂಗಡಿ: ಪಟ್ಟಣದಲ್ಲಿ ಭಾನುವಾರ ನಡೆದ ಹಿಂದೂ ಸಮಾಜೋತ್ಸವ ಸಂದರ್ಭದಲ್ಲಿ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡುವ ಕೋಮು ಪ್ರಚೋದಕ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ದಿಕ್ಸೂಚಿ ಭಾಷಣ ಮಾಡಿದ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಒಳಗೊಂಡಂತೆ ಸಂಘ ಪರಿವಾರದ ಐವರ ವಿರುದ್ಧ ದೂರು ದಾಖಲಾಗಿದೆ.
ಪ್ರಭಾಕರ ಭಟ್, ನಾ. ಸೀತಾರಾಮ, ಸಭೆಯ ಅಧ್ಯಕ್ಷತೆ ವಹಿಸಿದ್ದ ಉಪ್ಪಿನಂಗಡಿ ಸಿ.ಎ. ಬ್ಯಾಂಕ್ ನಿವೃತ್ತ ಕಾರ್ಯನಿರ್ವಾಹಣಾಧಿಕಾರಿ ಶೇಷಪತಿ ರೈ, ಉಪ್ಪಿನಂಗಡಿ ಹಿಂದೂ ಹಿತರಕ್ಷಣಾ ವೇದಿಕೆ ಅಧ್ಯಕ್ಷ, ಹೊಟೇಲ್ ಉದ್ಯಮಿ ಕರುಣಾಕರ ಸುವರ್ಣ, ಕಾರ್ಯದರ್ಶಿ ಕಿಶೋರ್ ಕುಮಾರ್ ಶಿರಾಡಿ ಅವರ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಮಾಜೋತ್ಸವದಲ್ಲಿ ಪ್ರಭಾಕರ ಭಟ್ `ಮುಸ್ಲಿಂ ಮಹಿಳೆಯರ ಚಾರಿತ್ರ್ಯದ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿದ್ದಾರೆ. ಅಲ್ಲಾಹು ಮತ್ತು ದರ್ಗಾ, ಮಸೀದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಕೋಮು ಪ್ರಚೋದನೆ ಮಾಡಿದ್ದಾರೆ~ ಎಂದು ಉಪ್ಪಿನಂಗಡಿ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ ದೂರಿನಲ್ಲಿ ಆಪಾದಿಸಿದ್ದಾರೆ.