ಬೆಂಗಳೂರು: ಲೋಕಾಯುಕ್ತದ ವಿಶೇಷ ನ್ಯಾಯಾಲಯದಲ್ಲಿ ವಕೀಲ ವಿನೋದ್ಕುಮಾರ್ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆಯ ಸಂದರ್ಭದಲ್ಲಿ ಬಂಧನದ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಮತ್ತು ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರಿಗೆ ಗುರುವಾರ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಅವರು ದಂಪತಿಗೆ ನಿರೀಕ್ಷಣಾ ಜಾಮೀನು ನೀಡಿದರು.
ಜಂತಕಲ್ ಗಣಿ ಕಂಪೆನಿಗೆ ಕಾನೂನುಬಾಹಿರವಾಗಿ ಗಣಿ ಗುತ್ತಿಗೆ ನೀಡಲು ಶಿಫಾರಸು ಮಾಡಿರುವುದು ಮತ್ತು ವಿಶ್ವಭಾರತಿ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸಗಟು ನಿವೇಶನ ಮಂಜೂರು ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಎಚ್ಡಿಕೆ ದಂಪತಿಗೆ ಬುಧವಾರ ಹೈಕೋರ್ಟ್ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ಕೋರ್ಟ್ ಮುಂದೆ ಖುದ್ದು ಹಾಜರಿಯಿಂದ ದಿನದ ಮಟ್ಟಿಗೆ ವಿನಾಯಿತಿ ನೀಡಿತ್ತು.