ಕಾರವಾರ: ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು (ಐಸಿಡಿಎಸ್) ಖಾಸಗೀಕರಣ ಮಾಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ರಾಜ್ಯ ಸಚಿವ ಡಾ.ವೀರೇಂದ್ರಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇಲ್ಲಿನ ಸಾವಂತವಾಡದ ಅಂಗನವಾಡಿ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
‘ಅಂತಹ ಯಾವುದೇ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದೆ ಇಲ್ಲ. ಈ ಯೋಜನೆಗೆ ರಾಜ್ಯ ಸರ್ಕಾರದ ಸಹಭಾಗಿತ್ವವೂ ಇದ್ದು, ಉತ್ತಮ ರೀತಿಯಲ್ಲಿ ಜಾರಿಯಾಗಿದೆ’ ಎಂದು ಹೇಳಿದರು.
ಐಸಿಡಿಎಸ್ ಅನ್ನು ಖಾಸಗೀಕರಣ ಮಾಡುವ ಹುನ್ನಾರ ನಡೆದಿದೆ ಎಂದು ಆರೋಪಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದರು.
‘ಅಂಗನವಾಡಿ ಕಾರ್ಯಕರ್ತೆಯರನ್ನು ಸಾಮಾಜಿಕ ಕಾರ್ಯಕರ್ತೆಯರು ಎಂದು ಪರಿಗಣಿಸಲಾಗಿದೆ. ಸಿಬ್ಬಂದಿಯ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ, ಬಜೆಟ್ನಲ್ಲಿ ಶೇ 30ರಿಂದ ಶೇ 40ರಷ್ಟು ಹೆಚ್ಚಿನ ಅನುದಾನ ಒದಗಿಸಿದೆ. ಇದರ ಜತೆಗೆ ರಾಜ್ಯ ಸರ್ಕಾರವೂ ತನ್ನ ಪಾಲಿನ ಹಣ ನೀಡುತ್ತಿದೆ’ ಎಂದು ಹೇಳಿದರು.