ಮೈಸೂರು: ಲಲಿತಮಹಲ್ ಪ್ಯಾಲೇಸ್ ಮಾದರಿಯಲ್ಲಿ ನಿರ್ಮಿಸಿರುವ ಪೊಲೀಸ್ ಕಮಿಷನರ್ ನೂತನ ಕಚೇರಿ ಉದ್ಘಾಟನೆ ಸಮಾರಂಭ ಶನಿವಾರ ರಾತ್ರಿ ಏಕಾಏಕಿ ರದ್ದಾಯಿತು. ಕಾರ್ಯಕ್ರಮಕ್ಕೆ ಬರಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರವಾಸವನ್ನು ಮೊಟಕುಗೊಳಿಸಿ ಬೆಂಗಳೂರಿನತ್ತ ಪ್ರಯಾಣಿಸಿದರು.
ನಜರಬಾದಿನ ಮಿರ್ಜಾ ರಸ್ತೆಯಲ್ಲಿ ನಿರ್ಮಾಣವಾದ ಕಟ್ಟಡಕ್ಕೆ ಉದ್ಯಾನದ ಜಾಗ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು.
ಕಟ್ಟಡ ಉದ್ಘಾಟಿಸಿದರೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ದೂರುದಾರರು ಹಾಗೂ ಬಿಜೆಪಿ ಮುಖಂಡರು ಎಚ್ಚರಿಕೆ ನೀಡಿದ್ದರು. ಗೃಹ ಸಚಿವ ರಾಮಲಿಂಗಾರೆಡ್ಡಿ, ಜಿಲ್ಲಾಧಿಕಾರಿ ಡಿ.ರಂದೀಪ್ ಅವರೊಂದಿಗೆ ಮುಖ್ಯಮಂತ್ರಿ ಚರ್ಚಿಸಿದ ಬಳಿಕ ಕಾರ್ಯಕ್ರಮ ರದ್ದು ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.