ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರೈತರು, ಮಹಿಳೆಯರು, ದಲಿತರು ಹಾಗೂ ಅಲ್ಪಸಂಖ್ಯಾತರ ಮತಗಳ ಮೇಲೆ ಕಣ್ಣಿಟ್ಟಿರುವ ಕರ್ನಾಟಕ ಜನತಾ ಪಕ್ಷ (ಕೆಜೆಪಿ), ಚುನಾವಣಾ ಪ್ರಣಾಳಿಕೆಯಲ್ಲಿ ಭರಪೂರ ಭರವಸೆಗಳನ್ನು ನೀಡಿದೆ.
`ಪಥವಲ್ಲ.... ಇದು ಶಪಥ....' ಎಂಬ ಘೋಷ ವಾಕ್ಯದ ಚುನಾವಣಾ ಪ್ರಣಾಳಿಕೆಯನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶನಿವಾರ ಬಿಡುಗಡೆ ಮಾಡಿದರು.
ತಾವು ಬಿಜೆಪಿ ಸರ್ಕಾರದಲ್ಲಿ ಮೂರು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೈಗೊಂಡಿದ್ದ ಹಲವು ಅಭಿವೃದ್ಧಿ ಕಾರ್ಯಗಳ ಜೊತೆಗೆ, 65 ವರ್ಷ ತುಂಬಿದ ರೈತರಿಗೆ ಮಾಸಾಶನ, ನೇಕಾರರು, ಮೀನುಗಾರರು, ರೈತರ ಸಾಲ ಮನ್ನಾ, ಭಾಗ್ಯಲಕ್ಷ್ಮಿ ಯೋಜನೆ ವಿಸ್ತರಣೆ, ಮಹಿಳೆಯರಿಗಾಗಿ ಪ್ರತ್ಯೇಕ ಸಹಕಾರಿ ಬ್ಯಾಂಕ್ ಸ್ಥಾಪನೆ ಸೇರಿದಂತೆ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ.