ಸುವರ್ಣ ಸೌಧ (ಬೆಳಗಾವಿ): ಕೃಷ್ಣರಾಜ ಸಾಗರ ಸೇರಿದಂತೆ ರಾಜ್ಯದ ಎಲ್ಲ ಜಲಾಶಯಗಳ ಸುತ್ತ ೫ ಕಿ.ಮೀ. ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ನಿಷೇಧಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ವಿಧಾನಸಭೆ ಯಲ್ಲಿ ಬುಧವಾರ ತಿಳಿಸಿದ್ದಾರೆ.
ಕಲ್ಲು ಗಣಿಗಾರಿಕೆಗೆ ನಡೆಸುವ ಸ್ಫೋಟದಿಂದ ಜಲಾಶಯಗಳಿಗೆ ಹಾನಿಯಾಗಬಹುದು ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಕರ್ನಾಟಕ ಕಲ್ಲುಪುಡಿ ಮಾಡುವ ಘಟಕಗಳ (ಕ್ರಷರ್ಗಳ) ನಿಯಂತ್ರಣ ಮಸೂದೆ ಮಂಡನೆಯಾದ ಸಂದರ್ಭದಲ್ಲಿ ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ 'ಜಲಾಶಯಗಳ ಸುತ್ತ ಕಲ್ಲು ಗಣಿಗಾರಿಕೆ ನಿಷೇಧ ಮಾಡಬೇಕು ಎಂಬ ಅಂಶ ಮಸೂದೆಯಲ್ಲಿ ಯಾಕೆ ಸೇರಿಲ್ಲ' ಎಂದು ಪ್ರಶ್ನೆ ಮಾಡಿದ್ದಕ್ಕೆ ಸಚಿವರು ಉತ್ತರಿಸಿದರು.
೫ ಕಿ.ಮೀ. ಸುತ್ತಳತೆಯಲ್ಲಿ ಕಲ್ಲು ಗಣಿಗಾರಿಕೆ ನಿಷೇಧ ಅಷ್ಟೇ ಅಲ್ಲದೆ ಜಲಾಶಯಗಳ ಸುರಕ್ಷತೆಯ ದೃಷ್ಟಿಯಿಂದ ಇನ್ನೂ ಕೆಲವು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪುಟ್ಟಣ್ಣಯ್ಯ ಸಲಹೆ ಮಾಡಿದರು. ಕಲ್ಲುಪುಡಿ ಮಾಡುವ ಘಟಕಗಳು ಸ್ಥಗಿತಗೊಂಡಿದ್ದರಿಂದ ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳೂ ಸಹ ಸ್ಥಗಿತಗೊಂಡಿವೆ.