ನರಸಿಂಹರಾಜಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ನರಸಿಂಹರಾಜಪುರ ಪಟ್ಟಣಕ್ಕೆ ಬಂದಿದ್ದ ವೇಳೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ರಾಜ್ಯ ಗುಪ್ತಚರ ದಳದ ಡಿವೈಎಸ್ಪಿ ಪಿ.ಶೇಖ್ ಹುಸೇನ್ (56) ಶುಕ್ರವಾರ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.
ಮುಖ್ಯಮಂತ್ರಿ ಭೇಟಿಯ ಭದ್ರತೆಗಾಗಿ ಶೇಖ್ ಹುಸೇನ್ ಬುಧವಾರದಿಂದ ತಾಲ್ಲೂಕು ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗುರುವಾರ ಪಟ್ಟಣಕ್ಕೆ ಬಂದಿದ್ದ ಸಿದ್ದರಾಮಯ್ಯ ರಾತ್ರಿ ಅಲ್ಲೇ ವಾಸ್ತವ್ಯ ಹೂಡಿದ್ದರು. ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಸಿದ್ದರಾಮಯ್ಯ ಹೆಲಿಕಾಪ್ಟರ್ ಮೂಲಕ ಹುಬ್ಬಳಿಗೆ ತೆರಳಿದರು. ಅವರು ತಲುಪಿದ ಸಂದೇಶ ಬಂದ ಕೂಡಲೇ ಶೇಖ್ ಹುಸೇನ್ ಜಿಲ್ಲಾ ಕೇಂದ್ರಕ್ಕೆ ಹೊರಡುವ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಿಸಲಾಗಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿಯೇ 11.20ರ ವೇಳೆಗೆ ಶೇಖ್ ಹುಸೇನ್ ಕುಸಿದು ಬಿದ್ದರು. ಕೂಡಲೇ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.
ಬಳಿಕ ಪಾರ್ಥೀವ ಶರೀರವನ್ನು ಚಿಕ್ಕಮಗಳೂರಿಗೆ ಕೊಂಡೊಯ್ದು ಸರ್ಕಾರಿ ಗೌರವ ಸಲ್ಲಿಸಿ, ಹಾಸನದ ವಿಜಯನಗರದಲ್ಲಿರುವ ಅವರ ಸ್ವಗೃಹಕ್ಕೆ ಒಯ್ಯಲಾಯಿತು. ಹಾಸನದಲ್ಲಿ ಶನಿವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.