ಹುಬ್ಬಳ್ಳಿ: ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಚಕ್ಕಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ಧಾರವಾಡ ಗ್ರಾಮೀಣ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಚ್.ವಿ. ಮಾಡಳ್ಳಿ ಇಲ್ಲಿನ ಸುಚಿರಾಯು ಆಸ್ಪತ್ರೆಯಲ್ಲಿ ಬುಧವಾರ ಬೆಳಗಿನ ಜಾವ ಕೊನೆಯುಸಿರೆಳೆದರು.
ನವಲಗುಂದ ತಾಲ್ಲೂಕಿನ ಶಲವಡಿ ಗ್ರಾಮದಲ್ಲಿ ಅಭ್ಯರ್ಥಿ ವಿನೋದ ಅಸೂಟಿ ಪರ ಸೋಮವಾರ ಪ್ರಚಾರ ನಡೆಸಲು ತೆರಳಿದ್ದರು. ಚಕ್ಕಡಿ ಹತ್ತುವ ವೇಳೆ ಆಯತಪ್ಪಿ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಅವರಿಗೆ ಪುತ್ರ, ಪುತ್ರಿ ಇದ್ದಾರೆ.
ಮೂಲತಃ ಅಣ್ಣಿಗೇರಿ ಪಟ್ಟಣದವರಾದ ಮಾಡಳ್ಳಿ ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತರು.
ಲಂಡನ್ ನಲ್ಲಿರುವ ಮಗಳು ಬಂದ ಕೂಡಲೇ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಿನ್ನೆಯಷ್ಟೇ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಿನ್ನೆ ಮೊಬೈಲ್ ಮೂಲಕ ಮಾಡಳ್ಳಿ ಪುತ್ರ ವೆಂಕಟೇಶ ಅವರೊಂದಿಗೆ ಮಾತನಾಡಿ ಆರೋಗ್ಯ ವಿಚಾರಿಸಿದ್ದರು.