ವಿಜಯಪುರ: ‘ಬೆಂಗಳೂರಿನ ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿ ನಡೆದ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳಾದ ಡಿ.ರೂಪಾ, ಕೃಷ್ಣ ಕುಮಾರ್ ಸೇರಿದಂತೆ ನಾಲ್ವರು ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ’ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷೆ ಮೀರಾ ಸಕ್ಸೇನಾ ಬುಧವಾರ ಇಲ್ಲಿ ತಿಳಿಸಿದರು.
ಇದೇ 23ರಂದು ಆಯೋಗದ ಮುಂದೆ ಹಾಜರಾಗುವಂತೆ ಅವರಿಗೆ ನೋಟಿಸ್ನಲ್ಲಿ ಸೂಚಿಸಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
‘ರೂಪಾ ಅವರ ವರ್ಗಾವಣೆ ವಿರೋಧಿಸಿ, ಕೈದಿಗಳು ಜೈಲಿನಲ್ಲಿ ಪ್ರತಿಭಟನೆ ನಡೆಸಿದ್ದರು. ಆ ಸಂದರ್ಭದಲ್ಲಿ ಕೈದಿಗಳ ಮೇಲೆ ಹಲ್ಲೆ ನಡೆಸಲಾಯಿತು ಎನ್ನುವ ದೂರು ಇದ್ದು, ಅದರ ವಿಚಾರಣೆ ನಡೆಯುತ್ತಿದೆ’ ಎಂದು ಅವರು ಹೇಳಿದರು.
‘ಎರಡು ದಿನಗಳ ಹಿಂದಷ್ಟೇ ಈ ಘಟನೆ ಕುರಿತ ಪ್ರಾಥಮಿಕ ವರದಿ ಬಂದಿದೆ.
ವರದಿ ಪ್ರಕಾರ ಕೆಲವು ತಪ್ಪುಗಳಾಗಿವೆ. ಆದರೆ, ಯಾವ ತಪ್ಪು ಎಂಬುದನ್ನು ಈಗಲೇ ಹೇಳುವುದಿಲ್ಲ’ ಎಂದು ಸಕ್ಸೇನಾ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.